ಕರ್ನಾಟಕ ಸರಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಉದ್ದೇಶಪೂರ್ವಕವಾಗಿ ತಾರತಮ್ಯ ಎಸಗುತ್ತಿದೆ. ಪ್ರಾಧಿಕಾರದ ಆದೇಶದ ನೀರು ಬಿಡುವಂತೆ ಆದೇಶಿಸಲು ಕೇಂದ್ರ ಸರಕಾರ ಮಧ್ಯಸ್ಥಿಕೆವಹಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರು ಪ್ರಾಧಿಕಾರದ ಅಂತಿಮ ಆದೇಶದಂತೆ ತಮಿಳುನಾಡಿಗೆ ನೀರು ಹರಿಸುವ ಬದಲು ಎಲ್ಲಾ ನೀರನ್ನು ಕರ್ನಾಟಕ ಬಳಸಿಕೊಳ್ಳುತ್ತಿದೆ. ಇದರಿಂದ ರಾಜ್ಯದ ರೈತರು ಬರದ ಬಾಧೆಯನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕಳೆದ ಮೂರು ತಿಂಗಳುಗಳ ಅವಧಿಯಲ್ಲಿ ಕರ್ನಾಟಕ ಸರಕಾರ ರಾಜ್ಯಕ್ಕೆ 94 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಕೇವಲ 66.43 ಟಿಎಂಸಿ ನೀರನ್ನು ಮಾತ್ರ ಹರಿಬಿಟ್ಟಿದೆ. 28 ಟಿಎಂಸಿ ನೀರಿನ ಕೊರತೆಯಾಗಿದೆ ಎಂದು ಪ್ರಧಾನಿ ಮೋದಿಯವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಉದ್ದೇಶಪೂರ್ವಕವಾಗಿ ಕಾವೇರಿ ನೀರು ಹರಿಬಿಡುವುದನ್ನು ತಡೆಯುತ್ತಿದೆ. ಕಾವೇರಿ ಪ್ರಾಧಿಕಾರದ ತೀರ್ಪನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸರಕಾರದ ನೀತಿಯಿಂದಾಗಿ ರಾಜ್ಯದ ರೈತರ ಬೆಳೆಗಳು ನಾಶವಾಗಿ ಕೋಟ್ಯಾಂತರ ರೂಪಾಯಿಗಳ ನಷ್ಟವಾಗಿವೆ. ಕೂಡಲೇ ಪ್ರಧಾನಿ ಮೋದಿ ಕರ್ನಾಟಕ ಸರಕಾರಕ್ಕೆ ತಾಕೀತು ಮಾಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಕೋರಿದ್ದಾರೆ.