ಬೆಂಗಳೂರು: ಸಾಹಿತ್ಯಲೋಕದ ದಿಗ್ಗಜ ಎಸ್ ಎಲ್ ಭೈರಪ್ಪ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಸಂದೇಶ ಬರೆದು ಸಂತಾಪ ವ್ಯಕ್ತಪಡಿಸಿದ್ದಾರೆ.
ಇಂದು ಮಧ್ಯಾಹ್ನ 2.38 ರ ಸುಮಾರಿಗೆ ಪದ್ಮಭೂಷಣ ಎಸ್ ಎಲ್ ಭೈರಪ್ಪ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ಕನ್ನಡಾಭಿಮಾನಿಗಳು, ಗಣ್ಯರು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ಮೋದಿ ಬಗ್ಗೆ ಭೈರಪ್ಪನವರು ಅನೇಕ ಬಾರಿ ಮೆಚ್ಚುಗೆಯ ಮಾತನಾಡಿದ್ದರು. ಇದೀಗ ಭೈರಪ್ಪನವರ ನಿಧನಕ್ಕೆ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಚಿಂತಿಸಲು, ಪ್ರಶ್ನಿಸಲು ಮತ್ತು ಸಮಾಜದೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು.
ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂದಿನ ದಿನಗಳಲ್ಲೂ ಜನರನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದಿದ್ದಾರೆ.