ಕೆಲ ಕಾಂಗ್ರೆಸ್ ನಾಯಕರು ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪವನ್ನು ಮಾಡಿದೆ. ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಧ್ವನಿ ಎತ್ತಿದ್ದನ್ನು ಕೆಲವು ಕಾಂಗ್ರೆಸ್ ನಾಯಕರು ವಿರೋಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಈ ರೀತಿಯಲ್ಲಿ ಕಿಡಿಕಾರಿದೆ.
ಆಗಸ್ಟ್ 12 ರಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರದಾನಿ ಮೋದಿ ಅವರ ಈ ನಿಲುವಿಗೆ ಮುಖ್ಯ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಬೆಂಬಲವನ್ನು ವ್ಯಕ್ತ ಪಡಿಸಿತ್ತು. ಆದರೆ ಸಭೆಯ ಬಳಿಕ 'ಕೈ'ನ ಕೆಲವು ನಾಯಕರು ಮೋದಿ ಹೇಳಿಕೆಗೆ ವಿರೋಧ ವ್ಯಕ್ತ ಪಡಿಸಿದ್ದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಈ ರೀತಿಯಲ್ಲಿ ಪ್ರತಿಕ್ರಿಯಿದೆ.
ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮೋದಿ ಅವರು ಬಲೂಚಿಸ್ತಾನದ ವಿಷಯ ಪ್ರಸ್ತಾಪಿಸಿದ್ದಕ್ಕೆ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅಸಮಾಧಾನ ವ್ಯಕ್ತ ಪಡಿಸಿದ್ದರು. ಪ್ರಧಾನಿ ಮೋದಿ ಬಲೂಚಿಸ್ತಾನದ ವಿಷಯವನ್ನು ಪ್ರಸ್ತಾಪಿಸಿರುವುದು ಭಾರತದ ಆಂತರಿಕ ವಿಷಯಗಳಲ್ಲಿ ಮೂಗು ತೂರಿಸುವುದಕ್ಕೆ ಪಾಕ್ಗೆ ಅವಕಾಶವನ್ನು ನೀಡಿದಂತಾಗುತ್ತದೆ ಎಂದು ಸಲ್ಮಾನ್ ಹೇಳಿದ್ದರು. ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತನಾಡುವ ಹಕ್ಕು ನಮಗಿದೆ. ಆದರೆ ಬಲೂಚಿಸ್ತಾನ ಪಾಕ್ನ ಆಂತರಿಕ ವಿಷಯ ಎಂದು ಅವರು ಪ್ರಧಾನಿ ಹೇಳಿಕೆಗೆ ಆಕ್ಷೇಪ ವ್ಯಕ್ತ ಪಡಿಸಿದ್ದರು.
ಅಂತರಾಷ್ಟ್ರೀಯ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡುವಾಗ ಭಾರತ ಒಂದೇ ಧ್ವನಿಯಲ್ಲಿ ಮಾತನಾಡಬೇಕು. ಆದರೆ ಕಾಂಗ್ರೆಸ್ ಪಕ್ಷ ಮಾತ್ರ ಏಕಧ್ವನಿಯಲ್ಲಿ ಮಾತನಾಡುವುದಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ .