ತನ್ನ ನಿಲುವನ್ನು ಬದಲಿಸಿರುವ ಕೇಂದ್ರಸರ್ಕಾರ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವ ಉತ್ತರಾಖಂಡ್ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಅವಕಾಶ ಕೊಡುವಂತೆ ಸುಪ್ರೀಂಕೋರ್ಟ್ ನೀಡಿರುವ ಸಲಹೆಯನ್ನು ಒಪ್ಪಿಕೊಂಡಿದೆ. ಹೀಗಾಗಿ ಉತ್ತರಾಖಂಡದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಅಂತ್ಯಗೊಳ್ಳುವ ಸಾಧ್ಯತೆಗಳಿದ್ದು ಮೇ.10 ರಂದು 10 ಗಂಟೆಯಿಂದ 1 ಗಂಟೆಯವರೆಗೆ ಬಹುಮತ ಸಾಬೀತು ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಆದರೆ ವಿಧಾನಸಭೆಯಿಂದ ಅಮಾನತಾಗಿರುವ 9 ಮಂದಿ ಕಾಂಗ್ರೆಸ್ ಶಾಸಕರು ಮತದಾನ ಮಾಡುವಂತಿಲ್ಲ ಎಂದು ಸುಪ್ರೀಂ ಹೇಳಿದೆ.
ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ 2 ಗಂಟೆಗಳ ಅವಧಿಗೆ ರಾಷ್ಟ್ರಪತಿ ಆಳ್ವಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಕೋರ್ಟ್ ಹೇಳಿದೆ. ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಮೇಲೆ ನಿಗಾ ಇಡಲು ವೀಕ್ಷಕರನ್ನು ನೇಮಕ ಮಾಡುವಂತೆ ಕೇಂದ್ರ ಸುಪ್ರೀಂಕೋರ್ಟಿಗೆ ಮನವಿ ಮಾಡಿಕೊಂಡಿದೆ.
ಅಂದು ವಿಧಾನಸಭೆಯಲ್ಲಿ ಮತ್ತೇನನ್ನೂ ಚರ್ಚಿಸಲು ಅವಕಾಶವಿಲ್ಲ. ಬಹುಮತ ಸಾಬೀತು ಪಡಿಸುವ ಪ್ರಕ್ರಿಯೆ ಶಾಂತಿಯುತ ಮತ್ತು ಯಾವುದೇ ಅಡಚಣೆ ಇಲ್ಲದೆ ಸಾಗಲಿದೆ ಎಂದು ಸುಪ್ರೀಂ ಹೇಳಿದೆ.