ಗುಜರಾತ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ವಿಜಯ್ ರೂಪಾನಿ ಆಯ್ಕೆಯಾಗಿದ್ದು, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.
ರಾಜ್ಯ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ವಿಜಯ್ ರೂಪಾನಿ, ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.
ಕೇಶುಭಾಯಿ ಪಟೇಲ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ರೂಪಾನಿ, ನಾವಿಬ್ಬರು ರಾಜ್ಕೋಟ್ ನಗರದವರಾಗಿದ್ದರಿಂದ ಅವರ ಆಶೀರ್ವಾದ ಪಡೆಯಲು ಬಂದಿದ್ದೇನೆ. ನನ್ನ ರಾಜಕೀಯ ಜೀವನಕ್ಕೆ ಅವರು ಹೊಸ ತಿರುವು ತಂದುಕೊಟ್ಟಿದ್ದಾರೆ ಎಂದರು.
ಕಳೆದ ವರ್ಷ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲು ಮತ್ತು ಪಟೇಲ್ ಸಮುದಾಯದ ಪ್ರತಿಭಟನೆಯಂತಹ ಕಠಿಣ ಸಂದರ್ಭದಲ್ಲಿ ರೂಪಾನಿ, ರಾಜ್ಯ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮುಂದಿನ ವರ್ಷ ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಬಿಜೆಪಿ, ಈಗಾಗಲೇ ಹಂತ ಹಂತವಾಗಿ ಚುನಾವಣೆ ಸಿದ್ಧತೆ ಆರಂಭಿಸಿದೆ ಎಂದು ವಕ್ತಾರರು ತಿಳಿಸಿದ್ದಾರೆ.