ಜಮ್ಮು ಕಾಶ್ಮಿರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಪಾಕಿಸ್ತಾನ ನೇರ ಹೊಣೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡ ಜೇಟ್ಲಿ, ಪಾಕಿಸ್ತಾನ ಯುದ್ಧದಲ್ಲಿ ಭಾರತದ ವಿರುದ್ಧ ಗೆಲ್ಲಲು ಸಾಧ್ಯವಿಲ್ಲ ಎನ್ನವುದನ್ನು ಮನವರಿಕೆ ಮಾಡಿಕೊಂಡು ಉಗ್ರರ ಗಡಿನುಸುಳುವಿಕೆಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಮ್ಮು ಕಾಶ್ಮಿರ ಭಾರತದ ಅವಿಭಾಜ್ಯ ಅಂಗವಾಗಿದೆ ಎನ್ನುವುದನ್ನು ಪಾಕಿಸ್ತಾನ ಪರಿಗಣಿಸುವುದಿಲ್ಲ. ದೇಶದಲ್ಲಿ ಹಿಂಸಾಚಾರ ಹೆಚ್ಚಿಸುವುದೇ ಪಾಕ್ ಕಾಯಕವಾಗಿದೆ ಎಂದು ಟೀಕಿಸಿದ್ದಾರೆ.
ಪಾಕಿಸ್ತಾನ ಮತ್ತು ಇತರ ವಿಚ್ಚಿದ್ರಕಾರಿ ಶಕ್ತಿಗಳು ಭಾರತದ ಏಕತೆಗೆ ಸವಾಲೊಡ್ಡಿವೆ. ಉಗ್ರರಿಗೆ ತಕ್ಕ ಪಾಠ ಕಲಿಸಲು ಭಾರತೀಯ ಸೇನೆ ಸನ್ನದ್ಧವಾಗಿದೆ. ಇಂತಹ ಕೃತ್ಯಗಳು ಭಾರತದ ಬೇರುಗಳನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.
ಜಮ್ಮು ಪ್ರದೇಶ ಬಿಜೆಪಿಯ ಬಲಾಢ್ಯ ಕೋಟೆಯಾಗಿದ್ದು, ಬಿಜೆಪಿ ಮುಖಂಡ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಕೇಂದ್ರ ಸರಕಾರದ ನೆರವು ಪಡೆದು ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ