Publish Date: Mon, 21 Feb 2022 (10:06 IST)
Updated Date: Mon, 21 Feb 2022 (13:40 IST)
ಶಿವಮೊಗ್ಗ : ಅನ್ಯಕೋಮಿನ ಗುಂಪೊಂದು ಯುವಕನೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ಹರ್ಷ ಎಂದು ಗುರುತಿಸಲಾಗಿದೆ. ಹರ್ಷ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ.
ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿತು.
ಹೀಗಾಗಿ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಇದೀಗ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.