Publish Date: Wed, 29 Sep 2021 (08:23 IST)
Updated Date: Tue, 28 Sep 2021 (23:58 IST)
ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ಕೊನೆಯ ಹಂತದಲ್ಲಿರುವ ಪ್ರಕರಣಗಳಿಗೆ ಕೂಡಲೇ ಪರಿಹಾರ ಪಾವತಿಸಲು, ಪುನರ್ ವಸತಿ ಕೇಂದ್ರಗಳ ಸ್ಥಾಪನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ 2500 ಕೋಟಿ ರೂ. ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಆಲಮಟ್ಟಿ ಹಿನ್ನೀರಿನಿಂದ ಮುಳುಗಡೆಯಾಗುವ 20 ಗ್ರಾಮಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಕೃಷ್ಣ ಭಾಗ್ಯ ಜಲ ನಿಗಮ ಕಚೇರಿಯನ್ನು ಆಲಮಟ್ಟಿಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಲು ಹೆಚ್ಚುವರಿ ಸಿಬಂದಿ ಮತ್ತು ಹೆಚ್ಚಿನ ಸಂಖ್ಯೆಯ ಸರ್ವೇಯರುಗಳನ್ನು ಬಳಸಿ ಸರ್ವೇ ಮಾಡಲು ಸೂಚಿಸಲಾಯಿತು ಎಂದು ತಿಳಿಸಿದರು.
ಕೃಷ್ಣಾ ಮೇಲ್ದಂಡೆ ಹಂತ 1 ಮತ್ತು 2ರಡಿ 6.22 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದ್ದರೂ, ಕಾಲುವೆಯ ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲ. ರೈತರ ಜಮೀನುಗಳಿಗೆ ನೀರು ಹರಿಯಬೇಕು. ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.