Publish Date: Sat, 15 Sep 2018 (08:44 IST)
Updated Date: Sat, 15 Sep 2018 (08:46 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ ನ ಕೆಲವು ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯಲು ಯತ್ನಿಸುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಖಡಕ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.
ವಿಪಕ್ಷ ಬಿಜೆಪಿ ಆಡಳಿತಾರೂಢ ಪಕ್ಷದ ಕೆಲವು ಶಾಸಕರನ್ನು ತನ್ನತ್ತ ಸೆಳೆದು ಸರ್ಕಾರ ಉರುಳಿಸಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಿಸಿವೆ. ಅಷ್ಟೇ ಅಲ್ಲ, ಬೆಳಗಾವಿ ಕಾಂಗ್ರೆಸ್ ನಲ್ಲಿ ಉಂಟಾಗಿರುವ ಭಿನ್ನಮತದ ಹಿಂದೆಯೂ ಬಿಜೆಪಿ ಕೈವಾಡವಿದೆ ಎಂಬ ಆರೋಪವಿದೆ.
ಇದೆಲ್ಲದರ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಪರೇಷನ್ ಕಮಲ ಮಾಡಿ ಪಕ್ಷದ ಇಮೇಜ್ ಗೆ ಧಕ್ಕೆ ತರದೇ ಒಳ್ಳೆಯ ವಿಪಕ್ಷವಾಗಿ ಕೆಲಸ ಮಾಡುವಂತೆ ತಮ್ಮನ್ನು ಭೇಟಿ ಮಾಡಿದ ಬಿಎಸ್ ಯಡಿಯೂರಪ್ಪಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈಗ ಸರ್ಕಾರ ಉರುಳಿಸುವ ಪ್ರಯತ್ನ ಮಾಡಿದರೆ ಮುಂಬರುವ ಲೋಕಸಭೆ ಚುನಾವಣೆ ಮೇಲೆ ಪಕ್ಷಕ್ಕೆ ಹೊಡೆತ ಬೀಳಬಹುದು ಎಂಬ ಲೆಕ್ಕಾಚಾರ ರಾಷ್ಟ್ರೀಯ ನಾಯಕರದ್ದು ಎನ್ನಲಾಗಿದೆ. ಹೀಗಾಗಿ ಸರ್ಕಾರ ಉರುಳಿಸುವ ಪ್ರಯತ್ನ ಮಾಡಬೇಡಿ ಎಂದು ಅಮಿತ್ ಶಾ ಸೂಚಿಸಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.