Publish Date: Sun, 26 Sep 2021 (14:31 IST)
Updated Date: Sun, 26 Sep 2021 (14:34 IST)
ಹೈದ್ರಾಬಾದ್ (ಸೆ 26) : ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಯ ವಿರುದ್ಧ ರೈತರು ಸತತ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದಾರೆ.
ಆದರೆ, ರೈತರ ಹೋರಾಟದ ಬಗ್ಗೆ ಕೇಂದ್ರ ಸರ್ಕಾರ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ಅಲ್ಲದೆ, ರೈತರ ಬೇಡಿಕೆಗೂ ಮಣಿಯವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಪರಿಣಾಮ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್. 27 ರಂದು ಭಾರತ್ ಬಂದ್ಗೆ ಕರೆ ನೀಡಿದೆ. ಈ ಬಂದ್ಗೆ ಬಿಜೆಪಿ ಏತರ ಸರ್ಕಾರವಿರುವ ಅನೇಕ ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ಇತ್ತೀಚಿನ ಬೆಳವಣಿಗೆಯಲ್ಲಿ ಬಿಜೆಪಿ ಮಿತ್ರವಾಗಿ ತನ್ನನ್ನು ಗುರುತಿಸಿಕೊಂ ಡಿರುವ ಆಂಧ್ರಪ್ರದೇಶದ ವೈಎಸ್ಆರ್ ಕಾಂಗ್ರೆಸ್ ಸಹ ಈ ಬಂದ್ ಅನ್ನು ಸಂಪೂರ್ಣವಾಗಿ ಬೆಂಬಲಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ತಾವು ರೈತ ಹೋರಾಟವನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.
ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಕಾರ್ಮಿಕರಿಗೆ ಮತ್ತು ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಬೆಂಬಲ ನೀಡುತ್ತದೆ ಎಂದು ಆಂಧ್ರಪ್ರದೇಶ ಸರ್ಕಾರ ಘೋಷಿಸಿದೆ. ಅಲ್ಲದೆ, ಸೆಪ್ಟೆಂಬರ್ 26 ಮಧ್ಯರಾತ್ರಿಯಿಂದ ಸೆಪ್ಟೆಂಬರ್ 27 ಮಧ್ಯಾಹ್ನದವರೆಗೆ ರಾಜ್ಯಾದ್ಯಂತ ಎಪಿಎಸ್ಆರ್ಟಿಸಿ ಬಸ್ಗಳನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಪೆರ್ನಿ ವೆಂಕಟರಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ.
ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆಯ ಖಾಸಗೀಕರಣವನ್ನು ತಾನು ಸಂಪೂರ್ಣವಾಗಿ ವಿರೋಧಿಸುತ್ತೇನೆ ಎಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಬಂದ್ನಲ್ಲಿ ಶಾಂತಿಯುತ ಪ್ರತಿಭಟನೆಗೆ ಮನವಿ ಮಾಡಿದ್ದಾರೆ.
ಈಗಾಗಲೇ ಕಾಂಗ್ರೆಸ್, ಎಡಪಕ್ಷಗಳು ಮತ್ತು ತೆಲುಗು ದೇಶಂ ಪಕ್ಷಗಳು ಆಂಧ್ರಪ್ರದೇಶದಲ್ಲಿ ಭಾರತ್ ಬಂದ್ಗೆ ತಮ್ಮ ಬೆಂಬಲವನ್ನು ಸೂಚಿಸಿವೆ. ರೈತರು ಕರೆ ನೀಡಿರುವ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಲ್ಲದೆ, ರೈತ ನಾಯಕರು ಈ ಬಂದ್ ಅನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸುವ ಭರವಸೆಯನ್ನೂ ನೀಡಿದ್ದಾರೆ.
ರಾಜ್ಯದಲ್ಲಿಯೂ ಸೋಮವಾರ ಕರ್ನಾಟಕ ಬಂದ್ಗೆ ರೈತಪರ ಸಂಘಟನೆಗಳು ಕರೆ ನೀಡಿದೆ. ರೈತರ ಕರೆಗೆ ಶಾಲಾ-ಕಾಲೇಜುಗಳು ನೈತಿಕ ಬೆಂಬಲ ವ್ಯಕ್ತಪಡಿಸಿದ್ದು, ಅಖಿಲ ಭಾರತ ವಕೀಲರ ಒಕ್ಕೂಟ ಸಂಪೂರ್ಣ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಘೋಷಿಸಿದೆ.
ರಾಜ್ಯದ ವಿದ್ಯಾರ್ಥಿ ಸಂಘಟನೆಗಳು, ಮಹಿಳಾ, ದಲಿತ, ಜನಪರ ಸಂಘಟನೆಗಳು ಪ್ರತಿಭಟನೆಯಲ್ಲಿ ತೊಡಗಿಸಿಕೊಳ್ಳಲು ಸಭೆ ನಡೆಸಿ ನಿರ್ಧರಿಸಿವೆ. ಭಾರತ್ ಬಂದ್ ಹಿನ್ನೆಲೆ ರಾಜ್ಯದಲ್ಲಿ ಕರ್ನಾಟಕ ಬಂದ್ ಯಶಸ್ವಿಗೊಳಿಸುವುದು ಮುಖ್ಯ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.