Publish Date: Sat, 09 Sep 2023 (08:45 IST)
Updated Date: Sat, 09 Sep 2023 (11:27 IST)
ಬೆಂಗಳೂರು : ಸೆ.11 ರಂದು ನಗರದ ಬಂದ್ಗೆ ಖಾಸಗಿ ವಾಹನ ಚಾಲಕರ ಒಕ್ಕೂಟ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ಬಂದ್ ಬಿಸಿ ಮುಟ್ಟಲಿದೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಯಶಸ್ಸು ಸರ್ಕಾರಕ್ಕೆ ಅನುಕೂಲವಾದರೆ ಖಾಸಗಿ ವಾಹನಗಳಾದ ಆಟೋ, ಓಲಾ, ಉಬರ್ ಸೇರಿದಂತೆ ಖಾಸಗಿ ಬಸ್ಗಳಿಗೆ ದೊಡ್ಡ ಪೆಟ್ಟು ಕೊಟ್ಟಿದೆ. ಮಹಿಳೆಯರು ಅವುಗಳಲ್ಲಿ ಸಂಚರಿಸುವುದನ್ನೇ ಬಿಟ್ಟಿದ್ದಾರೆ.
ಇದು ಖಾಸಗಿ ವಾಹನ ಚಾಲಕರ ಹಾಗೂ ಮಾಲೀಕರ ಆತಂಕಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಪರಿಹಾರ ಕೊಡುವಂತೆ ಸರ್ಕಾರಕ್ಕೆ ಒತ್ತಡ ಕೂಡ ತರಲಾಗಿತ್ತು. ಆದರೆ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ.
ಭಾನುವಾರ ರಾತ್ರಿ 12 ಗಂಟೆಯಿಂದಲೇ ಖಾಸಗಿ ವಾಹನ ಸಂಚಾರ ಬಂದ್ ಆಗಲಿದ್ದು, ಸೋಮವಾರ ರಾತ್ರಿ 12 ಗಂಟೆವರೆಗೆ ಬಂದ್ ಮಾಡಲು ಒಕ್ಕೂಟ ನಿರ್ಧಾರ ಮಾಡಿದೆ. ಬಂದ್ ಬಗ್ಗೆ ಜನರಿಗೆ ತಿಳಿಸಲು ಮತ್ತು ಬಂದ್ಗೆ ಬೆಂಬಲ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಕೂಡ ಮಾಡಿದೆ. ಕೆ.ಜಿ ರೋಡ್, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಕೆ.ಆರ್ ಮಾರ್ಕೆಟ್, ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.