Publish Date: Tue, 06 Sep 2022 (10:30 IST)
Updated Date: Tue, 06 Sep 2022 (10:21 IST)
ಬೆಂಗಳೂರು : ಸಿಇಟಿ ರ್ಯಾಂಕ್ ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಇಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಮ್ಮ ನಿವಾಸದಲ್ಲಿ ಕೆಇಎ ಅಧಿಕಾರಿಗಳು, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದರು. ಸಭೆಯಲ್ಲಿ ಏಕ ಸದಸ್ಯ ಪೀಠದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಯ್ತು.
ಸಭೆ ಬಳಿಕ ಮಾತನಾಡಿದ ಸಚಿವ ಅಶ್ವಥ್ ನಾರಾಯಣ, ಎಂದೂ ಆಗದ ರೀತಿ ಈ ಬಾರಿ ಸವಾಲು ನಾವು ನೋಡ್ತಿದ್ದೇವೆ. 25 ಸಾವಿರ ರಿಪೀಟರ್ಸ್ ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆ ಬರೆದಿದ್ದಾರೆ.
ಹೊಸ ವಿದ್ಯಾರ್ಥಿಗಳಿಗೆ ಇದರಿಂದ ಅನ್ಯಾಯ ಆಗದಂತೆ ನಾವು ನಿರ್ಧಾರ ಮಾಡಿದ್ವಿ. ಆದರೆ ಹೈಕೋರ್ಟ್ ರ್ಯಾಂಕ್ ರದ್ದು ಮಾಡಿದೆ. ಹೈಕೋರ್ಟ್ ಆದೇಶದ ತೀರ್ಪಿನಿಂದ 1.5 ಲಕ್ಷ ಹೊಸ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಲಿದೆ. ಹೀಗಾಗಿ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನ ಮಾಡಲಾಗಿದೆ ಎಂದರು.