Publish Date: Thu, 22 Dec 2022 (09:03 IST)
Updated Date: Thu, 22 Dec 2022 (09:39 IST)
ಬೆಂಗಳೂರು : ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೂ ನೇಕಾರ ಸಮ್ಮಾನ್ ಯೋಜನೆ ವಿಸ್ತರಣೆ ಮಾಡಲು ಹಾಗೂ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, 5 ಎಚ್ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
8 ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ವೃತ್ತಿಪರ ನೇಕಾರರ ಕೈಮಗ್ಗಕ್ಕೆ ಕೈಗಾರಿಕಾ ಇಲಾಖೆಯಿಂದ ನೀಡುತ್ತಿರುವ ಶೇ.30 ರಷ್ಟು ಸಹಾಯಧನವನ್ನು ಶೇ.50ಕ್ಕೆ ಹೆಚ್ಚಿಸುವ ಬೇಡಿಕೆಯನ್ನು ಒಪ್ಪಲಾಗಿದೆ.
ನೇಕಾರ ಸಮ್ಮಾನ್ ಯೋಜನೆಯಡಿ 46,000 ಕೈಮಗ್ಗ ನೇಕಾರರಿಗೆ 5,000 ರೂ.ಗಳನ್ನು ಡಿಬಿಟಿ ಮಾಡಲಾಗಿದೆ. ನೇಕಾರರ ಜನವಸತಿ ಪ್ರದೇಶದಲ್ಲಿರುವ ನೇಕಾರರಿಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ ನೀಡಲು ತೀರ್ಮಾನಿಸಲಾಗಿದೆ.
ಮನೆಯಲ್ಲಿಯೇ ಉದ್ಯೋಗ ನಡೆಸುತ್ತಿರುವ ನೇಕಾರರಿಗೆ `ಗುಡಿ ಕೈಗಾರಿಕೆ ಗಳೆಂದು ಪರಿಗಣಿಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಯಿಂದ ವಿನಾಯಿತಿ ನೀಡಲು ಆದೇಶ ಹೊರಡಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.