Publish Date: Sat, 30 Apr 2022 (09:43 IST)
Updated Date: Sat, 30 Apr 2022 (09:45 IST)
ನವದೆಹಲಿ : ಬೇಸಿಗೆಯ ಪ್ರತಾಪ ಹೆಚ್ಚಾಗುತ್ತಿದ್ದಂತೆ ದೇಶಾದ್ಯಂತ ವಿದ್ಯುತ್ತಿಗೆ ಭಾರಿ ಬೇಡಿಕೆ ವ್ಯಕ್ತವಾಗತೊಡಗಿದೆ.
ಬೇಡಿಕೆಯಷ್ಟು ವಿದ್ಯುತ್ ಪೂರೈಸಲು ಪರದಾಡುತ್ತಿರುವ ರಾಜ್ಯ ಸರ್ಕಾರಗಳು ತಾಸುಗಟ್ಟಲೆ ಲೋಡ್ಶೆಡ್ಡಿಂಗ್ ಘೋಷಣೆ ಮಾಡಿವೆ. ಜಮ್ಮು-ಕಾಶ್ಮೀರದಿಂದ ತಮಿಳುನಾಡಿನವರೆಗೆ ಬಹುತೇಕ ರಾಜ್ಯಗಳಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಶುರುವಾಗಿದೆ.
2ರಿಂದ 8 ತಾಸಿನವರೆಗೆ ವಿದ್ಯುತ್ ಕೈಕೊಡುತ್ತಿದೆ. ಗುಜರಾತ್, ಆಂಧ್ರಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬೇಡಿಕೆಯಷ್ಟು ವಿದ್ಯುತ್ ಸಿಗದ ಕಾರಣ ಕೈಗಾರಿಕೆಗಳಿಗೂ ವಿದ್ಯುತ್ ಕಡಿತ ಮಾಡಲಾಗುತ್ತಿದೆ.
ಕಲ್ಲಿದ್ದಲು ಸರಬರಾಜಿನಲ್ಲಿ ಆಗುತ್ತಿರುವ ವ್ಯತ್ಯಯದಿಂದಲೂ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗಿದೆ. ದೇಶದ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಶೇ.70ರಷ್ಟಕ್ಕೆ ಕಲ್ಲಿದ್ದಲು ಬೇಕು. ಕಲ್ಲಿದ್ದಲಿನ ಪೂರೈಕೆಯಿಂದ ಸಮಸ್ಯೆಯಾಗಿದೆ ಎಂದು ರಾಜ್ಯಗಳು ಹೇಳುತ್ತಿವೆಯಾದರೂ, ಬೇಡಿಕೆಗೆ ತಕ್ಕಷ್ಟುಕಲ್ಲಿದ್ದಲು ಅಗತ್ಯವಿದೆ ಎಂದು ಸರ್ಕಾರ ಹೇಳುತ್ತಿದೆ.
ಕಲ್ಲಿದ್ದಲು ಸಾಗಣೆಗೆ ಅಗತ್ಯವಿರುವ ರೈಲು ಬೋಗಿಗಳ ಕೊರತೆಯಿಂದಾಗಿ ಸಮಸ್ಯೆ ಉಲ್ಬಣಿಸಿದೆ ಎನ್ನಲಾಗಿದೆ. ಇದರ ಜತೆಗೆ ಉಕ್ರೇನ್ ಯುದ್ಧದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಧನ ಬೆಲೆ ದುಬಾರಿಯಾಗಿ, ಕಲ್ಲಿದ್ದಲು ಆಮದು ಕೂಡ ಕುಸಿದಿರುವುದು ಸಮಸ್ಯೆಗೆ ಕೊಡುಗೆ ನೀಡಿದೆ.