Publish Date: Thu, 25 Nov 2021 (10:07 IST)
Updated Date: Thu, 25 Nov 2021 (10:09 IST)
ಬೆಂಗಳೂರು : ಮಳೆಗಾಲದಲ್ಲಿ ಉಂಟಾಗುವ ಅನಾಹುತ ತಪ್ಪಿಸಲು ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದು,
ಹೊಸದಾಗಿ 51.5 ಕಿ.ಮೀ. ಉದ್ದದ ಪ್ರಾಥಮಿಕ ಹಂತದ ಕಾಲುವೆ ಹಾಗೂ 37 ಕಿ.ಮೀ. ಉದ್ದದ ದ್ವಿತೀಯ ಹಂತದ ಕಾಲುವೆ ನಿರ್ಮಿಸಲಾಗುತ್ತಿದೆ. ಇದಕ್ಕೆ ಅಗತ್ಯವಿರುವ 900 ಕೋಟಿ ರೂ.ಗಳನ್ನು ಸರಕಾರವೇ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾಗಿರುವ ಹಾನಿ, ರಾಜಕಾಲುವೆಗಳ ಸ್ಥಿತಿ ಹಾಗೂ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಾಲುವೆ ನಿರ್ಮಾಣಕ್ಕೆ 900 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜು ಪಟ್ಟಿ ಸಿದ್ಧಪಡಿಸಲಾಗಿದೆ. ಈ ಬಗ್ಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆನಂತರ ಅನುದಾನ ಬಿಡುಗಡೆ ಮಾಡಲಾಗುವುದು,'' ಎಂದು ತಿಳಿಸಿದರು.