Publish Date: Fri, 14 Jan 2022 (08:45 IST)
Updated Date: Fri, 14 Jan 2022 (08:50 IST)
ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಸಂಭವಿಸಿದ ಬಿಕಾನೇರ್-ಗುವಾಹಟಿ ರೈಲಿನ ಅಪಘಾತದಲ್ಲಿ ಸಾವಿನ ಸಂಖ್ಯೆ ಏಳಕ್ಕೆ ಏರಿದೆ,
45 ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಗುರುವಾರ ಅಸ್ಸಾಂ ಕಡೆ ತೆರಳುತ್ತಿದ್ದ ಬಿಕಾನೆರ್-ಗುವಾಹಟಿ ಎಕ್ಸ್ಪ್ರೆಸ್ನ(15633) 12 ಬೋಗಿಗಳು ಹಳಿತಪ್ಪಿದ್ದವು.
ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ ಮೂವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ಜಲ್ಪೈಗುರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೌಮಿತಾ ಬಸು ತಿಳಿಸಿದ್ದಾರೆ. ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಇಂದು ಮುಂಜಾನೆ ಪ್ರಧಾನಿ ಮೋದಿ ಕೂಡ ಅಧಿಕಾರಿಗಳ ಬಳಿ ವಿಚಾರಿಸಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಜನರ ಕುಟುಂಬ ಸದಸ್ಯರಿಗೆ ಭಾರತೀಯ ರೈಲ್ವೇ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.