Publish Date: Wed, 13 Apr 2022 (10:43 IST)
Updated Date: Wed, 13 Apr 2022 (10:46 IST)
ಬೆಂಗಳೂರು : ಉಡುಪಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬರುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ರಾಜೀನಾಮೆ ನೀಡುವಂತೆ ಸೂಚನೆ ನೀಡಿದೆ.
ಹೈಕಮಾಂಡ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಅಲ್ಲದೆ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಚಿವರು ಮೈಸೂರು ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ಇಂದು ಮಧ್ಯಾಹ್ನ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಕೆ ಮಾಡುವ ಸಾಧ್ಯತೆಗಳಿವೆ. ಇತ್ತ ಮಂಗಳೂರು ಪ್ರವಾಸದಲ್ಲಿರುವ ಸಿಎಂ ಮಧ್ಯಾಹ್ನ ರಾಜಧಾನಿಗೆ ವಾಪಸ್ಸಾಗಲಿದ್ದಾರೆ.
ಕಳೆದ ರಾತ್ರಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ದೆಹಲಿಯಲ್ಲಿ ಅಮಿತ್ ಶಾ ಜೊತೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಿದ್ದಾರೆ. ಪ್ರಕರಣ ರಾಜ್ಯದಲ್ಲಿ ಸರ್ಕಾರ ಮತ್ತು ಪಕ್ಷದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಮಾಹಿತಿ ಪಡೆದುಕೊಂಡ ಬಳಿಕ ಹೈಕಮಾಂಡ್ ಈಶ್ವರಪ್ಪ ರಾಜೀನಾಮೆಗೆ ಸೂಚನೆ ಕೊಟ್ಟಿದೆ .
ಇಂದು ಬೆಳಗ್ಗೆ ಹೈಕಮಾಂಡ್ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಮಾತುಕತೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮೂಲಕ ಹೈಕಮಾಂಡ್ ಗೆ ವಿವರಣೆ ನೀಡಲಾಗಿದೆ. ಈಶ್ವರಪ್ಪ ಅವರಿಂದ ವಿವರಣೆ ಪಡೆದು ಹೈಕಮಾಂಡ್ ಗೆ ರವಾನೆ ಮಾಡಲಾಗಿದೆ. ಈಶ್ವರಪ್ಪ ವಿವರಣೆಗೆ ಹೈಕಮಾಂಡ್ ಗರಂ ಆಗಿದೆ.