Publish Date: Wed, 23 Mar 2022 (14:53 IST)
Updated Date: Wed, 23 Mar 2022 (18:54 IST)
ಬೆಂಗಳೂರು : ಹಿಜಬ್ ವಿಚಾರದಲ್ಲಿ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಿಲ್ಲ ಎಂದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿಲುವು ಖಂಡನೀಯ ಎಂದು ಕ್ಯಾಂಪಸ್ ಫ್ರಂಟ್ ಕಿಡಿಕಾರಿದೆ.
ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ, ಸಂವಿಧಾನವು ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಮತ್ತು ಶಿಕ್ಷಣದ ಹಕ್ಕನ್ನು ನೀಡಿದೆ.
ಆದರೆ ಈ ಹಕ್ಕನ್ನು ಕಸಿದಿರುವ ರಾಜ್ಯ ಸರ್ಕಾರದ ಅನ್ಯಾಯದ ಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಇದೀಗ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆ ನಡೆಸುವುದಿಲ್ಲ ಎಂದಿರುವ ಶಿಕ್ಷಣ ಸಚಿವರ ನಿಲುವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದಿದೆ.
ಪದವಿ ಪೂರ್ವ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಸರ್ಕಾರವು ಚೆಲ್ಲಾಟವಾಡುತ್ತಿದ್ದು, ಇಂದು ರಾಜ್ಯದಲ್ಲಿ ಹಲವಾರು ಮುಸ್ಲಿಮ್ ವಿದ್ಯಾರ್ಥಿನಿಯರು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಸಚಿವರ ಹೇಳಿಕೆಯನ್ನು ಗಮನಿಸಿದರೆ, ಮುಸ್ಲಿಮ್ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸಿ ಅವರ ಸಾಕ್ಷರತಾ ಪ್ರಮಾಣವನ್ನು ಕಡಿಮೆ ಮಾಡಬೇಕೆಂಬ ದುರುದ್ದೇಶ ಅವರ ಹೇಳಿಕೆಯಲ್ಲಿ ಎದ್ದು ಕಾಣುತ್ತಿದೆ.
.