Publish Date: Mon, 25 Apr 2022 (09:27 IST)
Updated Date: Mon, 25 Apr 2022 (09:28 IST)
ಬೆಂಗಳೂರು : ಇತ್ತೀಚೆಗೆ ದೇಶದ ರಾಜಧಾನಿ ದೆಹಲಿ ಸೇರಿದಂತೆ ಇತರೆಡೆ ಕೋವಿಡ್ ಸೋಂಕಿತರ ಸಭೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ವಾರದ ಬಳಿಕ ಕೊರೊನಾ ನಾಲ್ಕನೇ ಅಲೆಯ ಆರಂಭದ ಬಗ್ಗೆ ತಜ್ಞರ ತಂಡ ಮುನ್ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಮಧ್ಯಾಹ್ನ ಸಭೆ ನಡೆಯಲಿದೆ. ಸಭೆಯಲ್ಲಿ ಕಂದಾಯ ಸಚಿವ ಅಶೋಕ್, ಆರೋಗ್ಯ ಸಚಿವ ಡಾ. ಸುಧಾಕರ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹಾಗೂ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಸದಸ್ಯರು ಭಾಗಿಯಾಗಲಿದ್ದಾರೆ.
ಸಭೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬುಧವಾರದಿಂದ ರಾಜ್ಯದಲ್ಲಿ ಕಟ್ಟುನಿಟ್ಟಿನ ಕೋವಿಡ್ ನಿಯಮಾವಳಿಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ.