Publish Date: Fri, 13 Jan 2023 (14:13 IST)
Updated Date: Fri, 13 Jan 2023 (16:14 IST)
ಬೆಂಗಳೂರು : ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಆ ಮೂಲಕ ರಾಜ್ಯ ಸರ್ಕಾರ, ಬಿಎಂಆರ್ಸಿಎಲ್ಗೆ ಕೋರ್ಟ್ ಮಾಸ್ಟರ್ ಸ್ಟ್ರೋಕ್ ಕೊಟ್ಟಿದೆ.
ಮಾಧ್ಯಮಗಳ ಸುದ್ದಿ ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತ ಕೇಸ್ ದಾಖಲಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಯಾವೆಲ್ಲಾ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ? ಮುಂಜಾಗ್ರತಾ ಕ್ರಮದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆಯೇ ಎಂಬ ಬಗ್ಗೆ ರಿಟ್ ಅರ್ಜಿ ಸಲ್ಲಿಸಲು ರಿಜಿಸ್ಟರ್ ಜನರಲ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂಚನೆ ನೀಡಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಬಿಎಂಆರ್ಸಿಎಲ್ನಿಂದ 20 ಲಕ್ಷ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 10 ಲಕ್ಷ ರೂ. ಪರಿಹಾರ ಘೋಷಿಸಿದರು.
ಅಲ್ಲದೇ ಮೆಟ್ರೋ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಕುಸಿದಿದೆ ಎಂಬ ಆರೋಪ ಕೇಳಿಬಂದಿದ್ದರಿಂದ ಮೂವರು ಎಂಜಿನಿಯರ್ಗಳನ್ನು ಅಮಾನತು ಮಾಡಲಾಯಿತು. ಜೊತೆಗೆ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ದಾಖಲಿಸುವಂತೆ ಸಿಎಂ ಸೂಚನೆ ನೀಡಿದ್ದರು.