Publish Date: Mon, 13 Sep 2021 (11:29 IST)
Updated Date: Mon, 13 Sep 2021 (11:33 IST)
ಬೆಂಗಳೂರು : ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಮೋಸ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭಗೊಂಡಿದ್ದು, ಕಲಾಪಕ್ಕೆ ಕಾಂಗ್ರೆಸ್ ನಾಯಕರು ಎತ್ತಿನಗಾಡಿಯಲ್ಲಿ ಬರುವ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ರ ಏರಿಕೆ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಮೋಸ ಮಾಡುತ್ತಿದೆ. ಮೋದಿ ಸರ್ಕಾರ ಜನತೆಗೆ ಬರಿ ಸುಳ್ಳು ಹೇಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿದೆ ಎಂದು ಸಬೂಬು ಹೇಳುತ್ತಿದೆ. ಆದರೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿಲ್ಲ. ಇನ್ನು ಹಿಂದಿನ ಸರ್ಕಾರದ ವಿರುದ್ಧವೂ ಆಡಳಿತ ಪಕ್ಷ ಕಿಡಿಕಾರುತ್ತಿದೆ. ಆದರೆ, ಕಳೆದ ಏಳು ವರ್ಷಗಳ ಅವಧಿಯಲ್ಲಿ 24 ಲಕ್ಷ ಕೋಟಿ ಆದಾಯ ಬಂದಿದೆ. ಕೇಂದ್ರ ಸರ್ಕಾರ ಬರಿ ಸುಳ್ಳು ಹೇಳುತ್ತಿದೆ. ಬೆಲೆ ಏರಿಕೆ ಖಂಡಿಸಿ ಸದನದ ಒಳಗೆ ಹಾಗೂ ಹೊರಗೆ ಎರಡೂ ಕಡೆ ಹೋರಾಟ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದರು.