Publish Date: Thu, 28 Apr 2022 (09:35 IST)
Updated Date: Thu, 28 Apr 2022 (09:37 IST)
ಬೆಂಗಳೂರು : ರಾಜ್ಯದಲ್ಲಿ ಸಂಭಾವ್ಯ 4ನೇ ಅಲೆ ಲಕ್ಷಣಗಳು ಕಾಣುತ್ತಿದ್ದರೂ ಸೋಂಕು ನಿಯಂತ್ರಣಕ್ಕೆ ಯಾವುದೇ ಕಠಿಣ ನಿರ್ಬಂಧಗಳನ್ನು ವಿಧಿಸದಿರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಆರ್ಥಿಕ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸದೆ, ಲಸಿಕೆ ಹಾಗೂ ಪರೀಕ್ಷೆ ಹೆಚ್ಚಳಕ್ಕೆ ಆದ್ಯತೆ ನೀಡುವ ಮೂಲಕ ಸೋಂಕು ನಿಯಂತ್ರಿಸಬೇಕು ಎಂದು ತೀರ್ಮಾನಿಸಿದೆ.
ಬುಧವಾರ ರಾಜ್ಯದ ಕೊರೋನಾ ಸ್ಥಿತಿಗತಿಗಳ ಕುರಿತು ವಿಡಿಯೋ ಸಂವಾದದ ಮೂಲಕ ಮಾಹಿತಿ ಪಡೆದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ 6ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ, 15ರಿಂದ 18 ವರ್ಷದ ವಯಸ್ಸಿನವರಿಗೆ ಲಸಿಕೆ ನೀಡುವುದಕ್ಕೆ ವೇಗ, 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಲಸಿಕೆ ನೀಡಲು ಹೆಚ್ಚು ಒತ್ತು ನೀಡಲು ನಿರ್ಧರಿಸಿದೆ.
ಪ್ರಧಾನಿ ಜೊತೆಗಿನ ವಿಡಿಯೋ ಸಂವಾದದ ಬಳಿಕ ಗೃಹ ಕಚೇರಿ ಕೃಷ್ಣಾ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅನಾವಶ್ಯಕವಾಗಿ ಯಾವುದೇ ನಿರ್ಬಂಧ ಹೇರಬಾರದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚಿಸಿದ್ದಾರೆ.
ಅದರಂತೆ ರಾಜ್ಯದಲ್ಲಿ ಕೊರೋನಾ 4ನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದೇ ಹೊರತು ಯಾವುದೇ ಅನಗತ್ಯ ಹಾಗೂ ಕಠಿಣ ನಿರ್ಬಂಧ ವಿಧಿಸುವುದಿಲ್ಲ. ಆರ್ಥಿಕ ಚಟುವಟಿಕೆಗೆ ನಿರ್ಬಂಧ ವಿಧಿಸದೆ 4ನೇ ಅಲೆ ನಿಯಂತ್ರಿಸಲಾಗುವುದು.