Publish Date: Fri, 31 Dec 2021 (14:08 IST)
Updated Date: Fri, 31 Dec 2021 (18:10 IST)
ಹೊಸ ವರ್ಷದ ಆರಂಭದಲ್ಲೇ ರಾಜ್ಯದಲ್ಲಿ ಓಮಿಕ್ರಾನ್ ಸ್ಫೋಟಗೊಂಡಿದೆ. ಈಗಾಗಲೇ ರಾಜ್ಯದಲ್ಲಿ ಹೊಸ ವರ್ಷದ ತಯಾರಿ ಆರಂಭವಾಗಿದೆ.
ಸೋಂಕು ಹರಡದಂತೆ ತಡೆಯಲು ನಿಯಮಗಳನ್ನೂ ಮಾಡಲಾಗಿದೆ. ಆದರೆ ಇಂದು ಒಂದೇ ದಿನ ರಾಜ್ಯದಲ್ಲಿ 23 ಮಂದಿಗೆ ಮಾರಕ ಓಮಿಕ್ರಾನ್ ಸೋಂಕು ದೃಢಪಟ್ಟಿವೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 50 ರ ಗಡಿ ದಾಟಿದೆ.
ಅಮೆರಿಕ, ಯುರೋಪ್ನಿಂದ ಬಂದಿದ್ದ ಪ್ರಯಾಣಿಕರಿಗೆ ಓಮಿಕ್ರಾನ್ ಸೋಂಕು ತಗುಲಿದೆ. ವಿದೇಶಗಳಿಂದ ಬಂದ 19 ಮಂದಿ ಪ್ರಯಾಣಿಕರಿಗೆ ಸೋಂಕು ತಗುಲಿದೆ ಎಂದು ಟ್ವಿಟರ್ನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಇನ್ನು ರಾಜ್ಯದಲ್ಲಿ ಕೊರೋನಾ ಅಬ್ಬರ ಕೂಡ ಮುಂದುವರೆದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಕೊಡಗು ಜಿಲ್ಲೆಯ ಮಡಿಕೇರಿಯ ಸಂತ ಜೋಸೆಫ್ ಶಾಲೆಯಲ್ಲಿ ಕೊರೊನಾ ಸ್ಪೋಟಗೊಂಡಿದ್ದು, ಶಾಲೆಯ 10 ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿದೆ.
9 ನೇ ತರಗತಿಯ 58 ವಿದ್ಯಾರ್ಥಿಗಳಲ್ಲಿ ಹತ್ತು ಮಕ್ಕಳಿಗೆ ಪಾಸಿಟಿವ್ ಬಂದಿದ್ದು, ಉಳಿದ 600 ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಕೋವಿಡ್ ಟೆಸ್ಟಿಂಗ್ ಕೈಗೊಳ್ಳಲಾಗಿದೆ. ಜತೆಗೆ ಶಾಲೆಯ 20 ಸಿಬ್ಬಂದಿಗಳಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ.