Publish Date: Thu, 13 Jan 2022 (06:12 IST)
Updated Date: Wed, 12 Jan 2022 (22:15 IST)
ಬೆಂಗಳೂರು : ಕೋವಿಡ್-19 ಪ್ರಕರಣಗಳ ಸಂಖ್ಯೆ, ಪಾಸಿಟಿವಿಟಿ ಪ್ರಮಾಣ ಆಧರಿಸಿ ತಾಲೂಕು, ಸ್ಥಳೀಯ ಮಟ್ಟದಲ್ಲಿ ಶಾಲೆ, ಪಿಯು ತರಗತಿಗಳ ಭೌತಿಕ ತರಗತಿಗಳು ಸ್ಥಗಿತ.
ಆನ್ಲೈನ್ ಕ್ಲಾಸ್/ಪರ್ಯಾಯ ಬೋಧನಾ ವಿಧಾನದ ತರಗತಿ ನಡೆಸುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ, ತಹಶೀಲ್ದಾರ್ಗಳು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.
ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಸಚಿವ ನಾಗೇಶ್ ಅವರು ಮಾತನಾಡಿದರು.
ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದರೂ, ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಕಡಿಮೆ ಇದೆ. ಒಂದನೇ ಮತ್ತು 2ನೇ ಅಲೆಯಂತೆ ಆತಂಕ ಪಡುವ ಅಗತ್ಯವಿಲ್ಲ. ವಿದೇಶಗಳಲ್ಲಿ ಮತ್ತು ಭಾರತದಲ್ಲಿ ವರದಿಯಾಗಿರುವ ಪ್ರಕರಣಗಳನ್ನು ಗಮನಿಸಿದರೆ ತೀವ್ರತೆ, ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಮತ್ತು ಅಪಾಯ ಕಡಿಮೆ ಕಾಣಿಸುತ್ತಿದೆ ಎಂದು ತಜ್ಞರು ತಿಳಿಸುತ್ತಿದ್ದಾರೆ.