Publish Date: Wed, 08 Dec 2021 (17:55 IST)
Updated Date: Wed, 08 Dec 2021 (21:59 IST)
ನವದೆಹಲಿ : ರೈತರ ವಿರುದ್ಧದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ಇತರೆ ಪ್ರಮುಖ ಬೇಡಿಕೆಗಳ ಈಡೇರಿಕೆ ಸಂಬಂಧ ಕೇಂದ್ರ ಸರ್ಕಾರ ನೀಡಿರುವ ಪರಿಷ್ಕೃತ ಪ್ರಸ್ತಾವನೆಯನ್ನು ರೈತ ಸಂಘಟನೆ ಒಪ್ಪಿದೆ.
ಕೇಂದ್ರದಿಂದ ಲಿಖಿತ ಪತ್ರ ಬಂದ ನಂತರ ನಾಳೆ ಮತ್ತೊಂದು ಸಭೆ ನಡೆಸಲಾಗುವುದು. ಪ್ರತಿಭಟನೆ ಮುಂದುವರಿಯಲಿದೆ ಎಂದು ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಾಮ್ ಸಿಂಗ್ ಛಾರುಣಿ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರ ಪ್ರಕರಣಗಳನ್ನು ತೆಗೆದುಕೊಳ್ಳದೆಯೇ ಇರಬಹುದೆಂಬ ಅನುಮಾನ ಇದೆ. ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ದಿನಾಂಕವನ್ನು ನಿಗದಿಪಡಿಸಲಿ ಎಂದು ಪಟ್ಟು ಹಿಡಿದಿದ್ದಾರೆ.
ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನಾನಿರತ ರೈತರ ಮೇಲೆ ದಾಖಲಾಗಿರುವ ಅಪರಾಧ ಪ್ರಕರಣಗಳನ್ನು ವಜಾಗೊಳಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಲಿಖಿತ ಭರವಸೆ ನೀಡಲಾಗುವುದೆಂದು ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿದ್ದವು.
ಕೇಂದ್ರ ಸರ್ಕಾರವು ಕಳುಹಿಸಿರುವ ಪರಿಷ್ಕೃತ ಪ್ರಸ್ತಾವನೆ ಬಗ್ಗೆ ಚರ್ಚಿಸಲು ಐವರು ಸದಸ್ಯರ ರೈತ ಮುಖಂಡರ ತಂಡವು ದೆಹಲಿಯಲ್ಲಿ ಇಂದು ಸಭೆ ನಡೆಯಿತು.