Publish Date: Sat, 16 Oct 2021 (07:21 IST)
Updated Date: Sat, 16 Oct 2021 (07:45 IST)
ಬೆಂಗಳೂರು(ಅ.16) : ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ತೀವ್ರವಾಗಿದ್ದು, ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಸಕ್ರಿಯವಾಗಿದೆ.
ಹಾಗಾಗಿ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ಸಾಧ್ಯತೆ?
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅಧಿಕ ಮಳೆಯ ನಿರೀಕ್ಷೆ ಇರುವುದರಿಂದ ಎರಡೂ ದಿನ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿನ ಕಡಿಮೆ ಒತ್ತಡದ ಪ್ರದೇಶದ ಕಾರಣ, ರಾಜ್ಯದ ಕರಾವಳಿ ಭಾಗಗಳಲ್ಲಿ ಕೂಡ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಸೈಕ್ಲೋನಿಕ್ ಸರ್ಕ್ಯುಲೇಷನ್ ಅರೇಬಿಯನ್ ಸಮುದ್ರದ ಮೇಲೆ ಕರ್ನಾಟಕ ಕರಾವಳಿಯಲ್ಲಿದೆ ಮತ್ತು ಇನ್ನೊಂದು ಪರಿಚಲನೆಯು ಬಂಗಾಳ ಕೊಲ್ಲಿಯಲ್ಲಿದೆ, ಇದರ ಪ್ರಭಾವದ ಕಾರಣ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ನಿರೀಕ್ಷೆಯಿದ್ದು, ಅದು ಅಧಿಕ ಮಳೆಗೆ ಕಾರಣವಾಗಲಿದೆ.