Publish Date: Mon, 03 Jan 2022 (07:20 IST)
Updated Date: Mon, 03 Jan 2022 (07:22 IST)
ಬೆಂಗಳೂರು : ಕರ್ನಾಟಕದಲ್ಲಿ 15ರಿಂದ 18 ವರ್ಷ ವಯೋಮಿತಿಯ ಸುಮಾರು 31.75 ಲಕ್ಷ ಮಕ್ಕಳಿದ್ದು, ಕೊರೊನಾ ಲಸಿಕೆ ಪಡೆಯಲು ಇವರೆಲ್ಲರೂ ಅರ್ಹತೆ ಪಡೆದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಮೂಡಲಪಾಳ್ಯದ ಬಿಬಿಎಂಪಿ ಶಾಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಈ ವಯೋಮಿತಿಯ ಮಕ್ಕಳಿಗೆ ಲಸಿಕೆ ನೀಡಲಾಗುವುದು. ಮೊದಲ ಡೋಸ್ ಲಸಿಕೆ ಪಡೆದ 28 ದಿನಗಳ ನಂತರ ಇವರಿಗೆ 2ನೇ ಡೋಸ್ ಲಸಿಕೆ ಪಡೆಯಲು ಅರ್ಹತೆ ಬರಲಿದೆ.
ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿಯೂ ಜಿಲ್ಲಾ ಉಸ್ತುವಾರಿ ಸಚಿವರು ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಪ್ರತಿ ತಾಲ್ಲೂಕಿನಲ್ಲಿ ಶಾಸಕರು ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಜಿಲ್ಲಾಧಿಕಾರಿಗಳು ಈಗಾಗಲೇ ಹಲವು ಸಭೆಗಳನ್ನು ನಡೆಸಿದ್ದು, ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಂಯೋಜನೆಯಿಂದ ಕೆಲಸ ಮಾಡಲು ಬೇಕಿರುವ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಸಿದ್ಧತೆ ಪೂರ್ಣಗೊಳಿಸಿದ್ದಾರೆ.
ಮಕ್ಕಳಿಗೆ ಲಸಿಕೆ ಕೊಡುವ ಅಭಿಯಾನಕ್ಕೆ ಚಾಲನೆ ಸಿಗುವ ಸೋಮವಾರದಂದು ಸುಮಾರು 6 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗುವುದು. ರಾಜ್ಯದಲ್ಲಿ ಪ್ರಸ್ತುತ 16 ಲಕ್ಷ ಕೊವ್ಯಾಕ್ಸಿನ್ ಡೋಸ್ಗಳಿವೆ.
ಶಾಲೆ ಮತ್ತು ಕಾಲೇಜು ಮಟ್ಟದಲ್ಲಿ ಲಸಿಕಾ ಅಭಿಯಾನಗಳು ನಡೆಯಲಿವೆ ಎಂದು ಸರ್ಕಾರ ತಿಳಿಸಿದೆ. ಈ ಸಂಸ್ಥೆಗಳು ಲಸಿಕಾ ಅಭಿಯಾನಕ್ಕೆ ಸಿಬ್ಬಂದಿ ಮತ್ತು ಮೂಲಸೌಕರ್ಯಗಳ ಬೆಂಬಲ ನೀಡಲಿವೆ.