Publish Date: Sat, 08 Oct 2022 (15:06 IST)
Updated Date: Sat, 08 Oct 2022 (15:58 IST)
ಬೆಂಗಳೂರು : ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಇಂದು ವಿಶೇಷ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಶನಿವಾರ ಅನುಮೋದನೆ ನೀಡಿದೆ. ಮೀಸಲಾತಿ ಸಂಬಂಧ ಕಾನೂನಾತ್ಮಕ ವಿಚಾರಗಳ ಬಗ್ಗೆ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿದೆ.
ಶನಿವಾರ ಕ್ಯಾಬಿನೆಟ್ನಲ್ಲಿ ವಿಷಯ ಮಂಡಿಸಿ ಅಧಿಕೃತ ಆದೇಶ ಹೊರಡಿಸುವುದಾಗಿ ಸಿಎಂ ಬೊಮ್ಮಾಯಿ ನಿನ್ನೆ ಘೋಷಣೆ ಮಾಡಿದ್ದರು. ಅದರಂತೆ ಇಂದು ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.
ಸದ್ಯ ಪರಿಶಿಷ್ಟ ಜಾತಿಗೆ 15% ಮತ್ತು ಪರಿಶಿಷ್ಟ ಪಂಗಡಕ್ಕೆ 3% ಮೀಸಲಾತಿ ಇದೆ. ನ್ಯಾ.ನಾಗಮೋಹನ್ ದಾಸ್ ಸಮಿತಿ ಜನಸಂಖ್ಯೆ ಆಧಾರದಲ್ಲಿ ಎಸ್ಸಿ ಮೀಸಲಾತಿ 15% ನಿಂದ 17%ಗೆ ಹಾಗೂ ಎಸ್ಟಿ ಮೀಸಲಾತಿ 3% ನಿಂದ 7%ಗೆ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.