Publish Date: Tue, 26 Apr 2022 (10:59 IST)
Updated Date: Tue, 26 Apr 2022 (11:02 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಾಥಮಿಕ ಹಂತದಲ್ಲೇ ಕಡಿವಾಣ ಹಾಕುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕೋವಿಡ್ ನೂತನ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.
ರಾಜ್ಯದಲ್ಲಿ ಫೆ.28 ರಿಂದ ಕೋವಿಡ್ ನಿರ್ಬಂಧಗಳನ್ನು ತೆಗೆದುಹಾಕಲಾಗಿತ್ತು. ಕೋವಿಡ್ ಕಡಿಮೆಯಾದ ಹಿನ್ನೆಲೆಯಲ್ಲಿ, ಸಾರ್ವಜನಿಕರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿತ್ತು.
ಆದರೆ, ಪ್ರಸ್ತುತ ಕರ್ನಾಟಕ, ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಕೋವಿಡ್ ನೂತನ ಮಾರ್ಗಸೂಚಿಯನ್ನು ಪಾಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಸಲಹೆ ಆದೇಶ ಹೊರಡಿಸಲಾಗಿದ್ದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾರ್ವಜನಿಕ ಅಂತರ ಪಾಲನೆ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ಸಂಚಾರದ ವೇಳೆ ಉಗುಳುವುದನ್ನು ನಿರ್ಬಂಧಿಸಬೇಕು.
ಒಂದು ವೇಳೆ ಉಗುಳುವುದು ಕಂಡರೆ ಸ್ಥಳೀಯ ಆಡಳಿತಾಧಿಕಾರಿಗಳು ದಂಡ ವಿಧಿಸುವಂತೆ ನಿಯಮ ಜಾರಿಗೊಳಿಸಬೇಕು ಎಂದು ಪಿ.ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.