Publish Date: Fri, 15 Apr 2022 (09:42 IST)
Updated Date: Fri, 15 Apr 2022 (09:46 IST)
ಹುಬ್ಬಳ್ಳಿ : ಸಚಿವ ಕೆ.ಎಸ್. ಈಶ್ವರಪ್ಪ ಅವರು ಇಂದು ಸಂಜೆ ರಾಜೀನಾಮೆ ನೀಡಲಿದ್ದು, ಸ್ವಪ್ರೇರಣೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವ ಈಶ್ವರಪ್ಪ ಅವರು ತೀರ್ಮಾನ ಮಾಡಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ಅವರ ಜೊತೆ ಮಾತನಾಡಿದ್ದೇನೆ. ಸ್ವಪ್ರೇರಣೆಯಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ.
ಜೊತೆಗೆ ಪ್ರಕರಣವನ್ನು ಆದಷ್ಟು ಬೇಗ ತನಿಖೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ. ಆದಷ್ಟು ಬೇಗ ಆರೋಪ ಮುಕ್ತನಾಗುವ ವಿಶ್ವಾಸ ಅವರಿಗಿದೆ ಎಂದು ತಿಳಿಸಿದರು.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತೇವೆ. ಪೊಲೀಸರು ತಮ್ಮ ಕೆಲಸವನ್ನು ಮಾಡಲು ಬಿಡಬೇಕು. ಇಡೀ ಬೆಳವಣಿಗೆ ತನಿಖೆ ಆದ ಮೇಲೆ ಈಶ್ವರಪ್ಪ ಆರೋಪ ಮುಕ್ತರಾಗುತ್ತಾರೆ ಎನ್ನುವ ವಿಶ್ವಾಸವಿದೆ. ಈ ಪ್ರಕರಣದಲ್ಲಿ ಸರ್ಕಾರಕ್ಕೆ ಹಿನ್ನಡೆ, ಮುನ್ನಡೆ ಅನ್ನೊ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.