Publish Date: Thu, 29 Oct 2009 (14:54 IST)
Updated Date: Mon, 11 May 2009 (10:51 IST)
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ 15 ದಿನಗಳೊಳಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸ್ಥಾನಕ್ಕೆ ಕುತ್ತು ಬರಲಿದೆ. ಒಂದು ವೇಳೆ ತಕ್ಷಣಕ್ಕೆ ಅಪಾಯದಿಂದ ಪಾರಾದರೂ ಡಿಸೆಂಬರ್ನಲ್ಲಿ ಎದುರಾಗುವ ರಾಜಕೀಯ ಗಂಡಾಂತರದಿಂದ ಯಡಿಯೂರಪ್ಪ ಪಾರಾಗಲು ಸಾಧ್ಯವೇ ಇಲ್ಲ ಎಂದು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ.
ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆ ಏರಿದ ದಿನದಿಂದಲೂ ರಾಜ್ಯದಲ್ಲಿ ಅವಘಡ, ಗಲಾಟೆ, ಸಾವುಗಳು ನಿರಂತರವಾಗಿ ಸಂಭವಿಸುತ್ತಿವೆ. ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ಘಳಿಗೆಯೇ ಸರಿಯಿಲ್ಲ. ಗಂಡಾಂತರದಿಂದ ಅವರು ಪಾರಾಗಬೇಕಿದ್ದರೆ ಮುಖ್ಯಮಂತ್ರಿಯಾದ 45 ದಿನಗಳಲ್ಲಿ ರಾಜೀನಾಮೆ ನೀಡಿ ಮತ್ತೆ ಅಧಿಕಾರ ಸ್ವೀಕರಿಸಬೇಕಿತ್ತು. ಆ ಕೆಲಸ ಮಾಡಿದ್ದರೆ 10 ವರ್ಷ ಅನಭಿಷಿಕ್ತ ದೊರೆಯಂತಿರಬಹುದಿತ್ತು. ಈಗ ಯಾವ ಶಾಂತಿ ಮಾಡಿಸಿದರೂ ಗಂಡಾಂತರದಿಂದ ಪಾರಾಗಲು ಸಾಧ್ಯವಾಗದು ಎಂದು ಶ್ರೀಗಳು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಅತಿ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಹಿಂದಿನ ಚುನಾವಣೆಗಿಂತ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡು ಪ್ರಬಲವಾಗಲಿದೆ. ರಾಜ್ಯದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ಸಂಭವಿಸುವ ಸಾಧ್ಯತೆಯಿದೆ ಎಂದರು.