|
****
ಗುರುವಿನ ಗುಲಾಮನಾಗುವ ತನಕ
ದೊರೆಯದಣ್ಣ ಮುಕುತಿ
ಗುರುಬ್ರಹ್ಮ ಗುರುರ್ವಿಷ್ಣು
ಗುರುಃದೇವೋ ಮಹೇಶ್ವರಃ
ಗುರುಸಾಕ್ಷಾತ್ ಪರಃ ಬ್ರಹ್ಮ
ತಸ್ಮೈಶ್ರೀ ಗುರವೇ ನಮಃ....
***
ಶಿಕ್ಷಕನಿಗೂ ವಿದ್ಯಾರ್ಥಿಗೂ ಅವಿನಾಭಾವ ಸಂಬಂಧವಿದೆ. ಮಗು ಮೊದಲು ಶಾಲೆಗೆ ಹೋದಾಗ ಶಿಕ್ಷಕ ಹೇಳಿದ್ದನೆಲ್ಲ ನಂಬುತ್ತದೆ. ಮಗುವಿನ ಜಗತ್ತಿನಲ್ಲಿ ಶಿಕ್ಷಕನೇ "ರೋಲ್ ಮಾಡೆಲ್", ಅವರೇ "ಸೂಪರ್ ಮ್ಯಾನ್". ತನ್ನ ಗುರುಗಳಿಗೆ ತಿಳಿಯದ ವಿಷಯವೇ ಇಲ್ಲ ಎಂದು ಭಾವಿಸಿಕೊಳ್ಳುತ್ತದೆ. ಇಂಥ ಕಾಲದಲ್ಲಂತೂ ಶಿಕ್ಷಕನ ಜವಾಬ್ದಾರಿ ನಿಜವಾಗಿಯೂ ಮಹತ್ವದ್ದಾಗಿರುತ್ತದೆ. ಎಲ್ಲ ವಿಷಯಗಳಲ್ಲೂ ಸಮಾನತೆ ಕಾಯ್ದುಕೊಂಡು ಆರೋಗ್ಯಪೂರ್ಣ ಸಮಾಜಕ್ಕಾಗಿ ಆರೋಗ್ಯ ಪೂರ್ಣ ಪ್ರಜೆಯನ್ನು ರೂಪಿಸುವ ಜವಾಬ್ದಾರಿ ಗುರುವಿನದು. ಈ ಹಂತದಲ್ಲಿ ನೀಡಿದ ಶಿಕ್ಷಣವೇ ಮಗುವನ್ನು ಜವಾಬ್ದಾರಿಯುತ ಪ್ರಜೆಯಾಗಿ ಬೆಳೆಸುತ್ತದೆ. ಇಂಥ ಪಕ್ವ ಕಾಲದಲ್ಲಿ ಈಗಿನ ಶಿಕ್ಷಕರು ನಿಜವಾಗಿ ತಮ್ಮ ಜವಾಬ್ದಾರಿಗೆ ನ್ಯಾಯ ಸಲ್ಲಿಸುತ್ತಿದ್ದಾರೆಯೇ..?****
ಎಲ್ಲ ಶಿಕ್ಷಕರೂ ತಮ್ಮ ಜವಾಬ್ದಾರಿಯಿಂದ ವಿಮುಖಗೊಂಡಿದ್ದಾರೆಂದು ಹೇಳುವುದು ನನ್ನ ಉದ್ದೇಶವಲ್ಲ. ಹಾಗೆಯೇ ವಿದ್ಯಾರ್ಥಿಗಳೆಲ್ಲರೂ ಪ್ರಾಮಾಣಿಕರು ಎನ್ನುವುದೂ ಅಲ್ಲ. ಈಗಲೂ ಬೆರಳೆಣಿಕೆಯಷ್ಟು ಶಿಕ್ಷಕರು ತಮ್ಮ ಸ್ಥಾನಕ್ಕೆ ನಿಜವಾದ ಮಹತ್ವ ತಂದುಕೊಟ್ಟಿದ್ದಾರೆ. ಯಾವುದೇ ಮೂಲಸೌಕರ್ಯಗಳಿಲ್ಲದ ಊರಲ್ಲಿ ಮಕ್ಕಳನ್ನು ಮೇಲಕ್ಕೆ ತರಲು ಟೊಂಕ ಕಟ್ಟಿ ಹರಸಾಹಸ ಪ್ರದರ್ಶಿಸುವ ಶಿಕ್ಷಕರೆಷ್ಟಿಲ್ಲ? ಇನ್ನೂ ಕೆಲವರಂತೂ ಎಲ್ಲ ಮಕ್ಕಳನ್ನು ತಮ್ಮ ಮಕ್ಕಳೆಂದು ಭಾವಿಸಿ, ಅವರ ಭವಿತವ್ಯಕ್ಕಾಗಿ ಟೊಂಕ ಕಟ್ಟಿ ನಿಂತಿರುತ್ತಾರೆ. ಇಂಥವರು ಬೆಳಕಿಗೆ ಬರುತ್ತಿಲ್ಲ ಎಂಬುದು ಶಿಕ್ಷಕ ಸಮುದಾಯದ ದುರದೃಷ್ಟ.