ಬಲಿಯೇಂದ್ರ ದಂಪತಿ ಶುಚೀರ್ಭೂತರಾಗಿ ಮಡಿಯುಟ್ಟು ಶುಭ್ರ ಮನಸ್ಸಿನಿಂದ ಸಕಲ ಮರ್ಯಾದೆಯನ್ನೂ ನೀಡಿ ಬ್ರಾಹ್ಮಣನನ್ನು ಬರಮಾಡಿಕೊಂಡರು. ದಾನ ಮಾಡಲು ಕೊಂಬಿನ ಗಿಂಡಿಯೂ ಸಿದ್ಧವಾಯಿತು. ಭೂಮಿಯನ್ನು ಧಾರೆಯೆರೆಯಲು ದಂಪತಿ ಕೊಂಬಿನ ಗಿಂಡಿ ಹಿಡಿದು ನಿಂತಾಗ ಅದರಿಂದ ನೀರು ಹೊರ ಬರಲೇ ಇಲ್ಲ. ಆಗ ಬ್ರಾಹ್ಮಣ ರೂಪಿ ಶ್ರೀಮನ್ನಾರಾಯಣನು ದರ್ಭೆ ಕಡ್ಡಿ ತೆಗೆದು ಕೊಂಬಿನ ಗಿಂಡಿಯಿಂದ ತೀರ್ಥ ಬರುವುದನ್ನು ತಡೆಯಲು ಅಡ್ಡ ಕೂತಿದ್ದ ಕಪ್ಪೆ ರೂಪದ ಶುಕ್ರಾಚಾರ್ಯನಿಗೆ ಚುಚ್ಚುತ್ತಾನೆ. ತಕ್ಷಣವೇ ನೀರಿನ ಬದಲು ಕೊಂಬಿನ ಗಿಂಡಿಯಿಂದ ರಕ್ತ ಸುರಿಯಲಾರಂಭಿಸುತ್ತದೆ. ಹೆದರಿದ ಬಲಿಯು ತನ್ನಿಂದೇನಾದರೂ ತಪ್ಪಾಯಿತೇ ಎಂದು ವಾಮನನ್ನು ಪ್ರಶ್ನಿಸಿದಾಗ, ಶುಕ್ರಾಚಾರ್ಯ ದಾನ ಕೈಂಕರ್ಯಕ್ಕೆ ಅಡ್ಡ ನಿಂತಿದ್ದ ವಿಚಾರವನ್ನು ಹೇಳುತ್ತಾನೆ. ದಾನ ಧಾರೆಯೆರೆಯುವ ಕರ್ಮ ಸಮಾಪ್ತಿಯಾಗಿರುತ್ತದೆ. ಆದರೆ ಬ್ರಾಹ್ಮಣ ಚುಚ್ಚಿದ ದರ್ಭೆ ಕಡ್ಡಿಯಿಂದ ಕಪ್ಪೆ ರೂಪದಲ್ಲಿದ್ದ ಶುಕ್ರಾಚಾರ್ಯ ಒಂದು ಕಣ್ಣನ್ನೇ ಕಳೆದುಕೊಂಡಿರುತ್ತಾನೆ. (ಈಗಲೂ ಜಾತಕದಲ್ಲಿ ಶುಕ್ರದೆಸೆ ಆರಂಭವಾಯಿತೆಂದರೆ ಸೋಲು ಮತ್ತು ವ್ಯಕ್ತಿಗೆ ದೃಷ್ಟಿದೋಷವಿದೆ ಎಂಬುದನ್ನು ಬೊಟ್ಟು ಮಾಡಲಾಗುತ್ತದೆ).
ತಕ್ಷಣ ವಾಮನರೂಪಿ ಬ್ರಾಹ್ಮಣ ವಿಶ್ವರೂಪಿ ಶ್ರೀಮನ್ನಾರಾಯಣನಾಗಿ ಬದಲಾಗುತ್ತಾನೆ. ಕೊಟ್ಟ ಮಾತಿನಂತೆ ಬಲಿ ಚಕ್ರವರ್ತಿ ಮೂರು ಹೆಜ್ಜೆ ಭೂಮಿಯನ್ನು ನೀಡಬೇಕಾಗಿರುವುದರಿಂದ ಮೊದಲ ಹೆಜ್ಜೆಯನ್ನು ಭೂಮಿಗೆ ಇಡುತ್ತಾನೆ. ಪೂರ್ತಿ ಭೂಮಿ ಅವನ ಪಾದಕ್ಕೆ ಮುಗಿದುಹೋಗುತ್ತದೆ. ಎರಡನೇ ಹೆಜ್ಜೆಯನ್ನು ಆಕಾಶಕ್ಕಿಡುತ್ತಾನೆ. ಮೂರನೇ ಹೆಜ್ಜೆಯನ್ನು ಎಲ್ಲಿಡಲಿ ಎಂದು ಬಲಿಯನ್ನು ವಿಷ್ಷು ಪ್ರಶ್ನಿಸುತ್ತಾನೆ. ಆಗ ಬಲಿಯು ತನ್ನ ತಲೆಯ ಮೇಲೆ ಇಡುವಂತೆ ಹೇಳುತ್ತಾನೆ. ವಾಮನಮೂರ್ತಿ ತಲೆಯ ಮೇಲೆ ಕಾಲಿಟ್ಟ ಕೂಡಲೇ ಬಲಿಯೇಂದ್ರ ಪಾತಾಳಲೋಕಕ್ಕೆ ತಳ್ಳಲ್ಪಡುತ್ತಾನೆ. ತೂತಾದ ದೋಣಿ, ತುಂಡಾದ ಹುಟ್ಟನ್ನು ಕೊಟ್ಟು ಪಾತಾಳಕ್ಕೆ ಕಳುಹಿಸುವಾಗಲೂ ಪ್ರಸನ್ನವದನನಾಗಿಯೇ ಎಲ್ಲವನ್ನೂ ಸ್ವೀಕರಿಸುವ ಬಲಿಯೇಂದ್ರನಿಗೆ ಭಗವಂತನನ್ನು ಕಣ್ಣಾರೆ ಕಂಡ ಸಂತಸವುಂಟಾಗಿ ಮೋಕ್ಷ ಸಿಕ್ಕಿತು ಎಂದುಕೊಳ್ಳುತ್ತಾನೆ. (ಕಲಿಯನ್ನು ಶೀಘ್ರ ಭೂಲೋಕಕ್ಕೆ ಕರೆಸುವ ಯಾಗದ ಪೂರ್ಣಾಹುತಿ ನಡೆಯುವುದಿಲ್ಲ)
ಆದರೆ ಪಾತಾಳ ದಾರಿಯಲ್ಲಿ ಸ್ವಲ್ಪ ದೂರ ಕ್ರಮಿಸುವಾಗ ಬಲಿಯು ಕಣ್ಣೀರು ಸುರಿಸುತ್ತಾನೆ. ವಿಶ್ವರೂಪ ನೋಡಿದ್ದೀಯಾ... ಭಾಗ್ಯ ಎಂದು ಕೊಂಡಿದ್ದಿ... ಮೋಕ್ಷವೂ ಸಿಕ್ಕಿದೆ ಎಂದ ಮೇಲೆ ನಿನಗೆ ಸ್ವರ್ಗ ಖಚಿತ. ಮತ್ಯಾಕೆ ಕಣ್ಣೀರು ಎಂದು ವಿಷ್ಣು ಪ್ರಶ್ನಿಸಲು, ಬಲಿಯೇಂದ್ರ "ಈ ಊರು, ಈ ಜನರನ್ನು ನಾನು ಇನ್ಯಾವಾಗ ನೋಡಲಿ. ಅವರ ಪ್ರೀತಿಯಿಂದ ನಾನು ವಂಚಿತನಲ್ಲವೇ?" ಎನ್ನುತ್ತಾನೆ. ಆಗ ವಿಷ್ಣುವು "ವರ್ಷಕ್ಕೊಮ್ಮೆ ಆಟಿ ತಿಂಗಳ ಅಮವಾಸ್ಯೆಗೆ ತಾಯಿಯನ್ನು, ಸೋಣ ಸಂಕ್ರಮಣದಂದು ಆಳನ್ನು ಕಳುಹಿಸು, ದೀಪಾವಳಿ ಅಮವಾಸ್ಯೆಯಂದು ನೀನೇ ಸ್ವತ: ನೀನೇ ಬಂದು ಬಲಿಯನ್ನು ಸ್ವೀಕರಿಸಿ, ನಿನ್ನ ಊರಿನ-ಜನರ ಕ್ಷೇಮ ಸಮಾಚಾರ ತಿಳಿದುಕೋ. ದೀಪಾವಳಿ ಆಚರಿಸದವನಿಗೆ ದರಿದ್ರ ಬರಲಿ" ಎಂದು ಬಲಿಯೇಂದ್ರನನ್ನು ಹರಸಿ ವಿಷ್ಣು ಮಾಯವಾಗುತ್ತಾನೆ.
ಈ ದಿನವನ್ನೇ ನಾವು ಬಲಿಪಾಡ್ಯಮಿ ಎಂದು ಆಚರಿಸುವುದು ಪ್ರತೀತಿ. ಈ ದಿನವನ್ನು ಅಯ್ಯೋಧ್ಯಾಧಿಪತಿ ಶ್ರೀರಾಮ ಸೀತೆ, ಲಕ್ಷ್ಮಣರೊಡಗೂಡಿ ವನವಾಸ ಮುಗಿಸಿ ವಾಪಾಸು ಬಂದ ದಿನವೆಂದೂ ಉತ್ತರ ಭಾರತದೆಡೆ ಆಚರಿಸಲಾಗುತ್ತದೆ. ಕೇರಳದಲ್ಲಿ 'ಓಣಂ' ಹಬ್ಬದ ಹೆಸರಿನಲ್ಲೂ ಬಲಿಯನ್ನು ನೆನೆಯಲಾಗುತ್ತದೆ. ಬಲೀಂದ್ರನನ್ನು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಎಲ್ಲರೂ ಆರಾಧಿಸುತ್ತಾರೆ.
ತುಳುನಾಡಿನಲ್ಲಿ ದೀಪಾವಳಿ ಸಂದರ್ಭದಲ್ಲಿ ಬಲಿಯೇಂದ್ರ ಮರ ಹಾಕುವುದು ಪ್ರತಿ ಮನೆಯಲ್ಲಿ ಸಾಮಾನ್ಯ. ವ್ಯವಸಾಯ ಪರಿಕರಗಳಾದ ನೊಗ, ನೇಗಿಲು, ಹಾರೆ, ಪಿಕ್ಕಾಸು, ಹಟ್ಟಿಗೊಬ್ಬರ ತೆಗೆಯುವ ಬುಟ್ಟಿ-ಮುಳ್ಳಿನ ಪಿಕ್ಕಾಸು, ಮುಟ್ಟಾಳೆ, ಕತ್ತಿ, ಕಳಸೆ, ಸೇರು, ಪಾವು, ಸೆಗಣಿ ಮೆತ್ತಿದ ಬುಟ್ಟಿಗಳನ್ನು ಶುಚಿಗೊಳಿಸಿ ಒಂದೆಡೆ ಒಪ್ಪ ಓರಣವಾಗಿ ಜೋಡಿಸಿ ಕಾಡಿನಲ್ಲಿ ದೊರೆಯುವ ಹಲವು ಬಗೆಯ ಹೂ-ಬಳ್ಳಿಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುವುದು ಈಗಲೂ ನಡೆಯುತ್ತದೆ. ಮೂರು ದಿನಗಳ ಕಾಲ ದೀಪವನ್ನು ಉರಿಸಿ ಬಲಿಯೇಂದ್ರನನ್ನು ನೆನೆಯಲಾಗುತ್ತದೆ. ಭತ್ತದ ರಾಶಿ, ಗದ್ದೆ, ತೋಟ, ಹಟ್ಟಿ ಗೊಬ್ಬರದ ಗುಂಡಿಗಳಲ್ಲಿ ಅಗೆಲು ಹಾಕುತ್ತಾರೆ. ಗೋವುಗಳನ್ನು ಸ್ನಾನ ಮಾಡಿಸಿ ಮೈಯೆಲ್ಲಾ ಎಳ್ಳೆಣ್ಣೆ ಪೂಸಲಾಗುತ್ತದೆ. ನಂತರ ಹೂ ಮಾಲೆ ಹಾಕಿ, ಕಾಲಿಗೆ ನೀರು ಹೊಯ್ದು, ಆರತಿ ಮಾಡಿ, ಅಗೆಲು ಕೊಟ್ಟು ಪೂಜಿಸುತ್ತಾರೆ. ಇತ್ತೀಚಿನ ದಿನಗಳ ನಗರೀಕರಣದ ಪ್ರಭಾವದಿಂದಾಗಿ ಇಂತಹ ಆಚರಣೆಗಳು ಕ್ಷೀಣಿಸಿದರೂ ಪೂರ್ತಿಯಾಗಿ ನಿಂತಿಲ್ಲ ಎನ್ನುವುದು ಸಮಾಧಾನಕರ.
ಈ ಸಂದರ್ಭ ಪಟಾಕಿ, ಬಾಣ-ಬಿರುಸುಗಳ ಸದ್ದು-ಗದ್ದಲ ಕೇಳದ-ಕಾಣದ ಮನೆ ಬೀದಿಗಳೇ ಇರುವುದಿಲ್ಲ. ಅಲ್ಲಲ್ಲಿ ಎಣ್ಣೆ ದೀಪ, ಹಣತೆಗಳನ್ನು ಉರಿಸಿಟ್ಟು ದೀಪಗಳ ಹಬ್ಬ ದೀಪಾವಳಿ ಎಂದು ಆಚರಿಸಲಾಗುತ್ತದೆ. ಜಾತಿ, ಮತ, ಬೇಧವಿಲ್ಲದೆ ಎಲ್ಲರೂ ಸಂಭ್ರಮವನ್ನಾಚರಿಸುವುದು ದೀಪಾವಳಿ ವಿಶೇಷ. ನರಕಚತುರ್ದಶಿ, ಲಕ್ಷ್ಮಿಪೂಜೆ ಮತ್ತು ಬಲಿಪಾಡ್ಯಮಿಯನ್ನು ಭಕ್ತಿಯಿಂದ ಆಚರಿಸಿದರೆ ಸಕಲ ಕಷ್ಟಗಳೂ ಪರಿಹಾರವಾಗುವುದೆಂಬ ನಂಬಿಕೆಯಿದೆ.
ನಮಗಂತೂ ದೀಪಾವಳಿ ಸಂಭ್ರಮ ಯಾವತ್ತೂ ಮೇರೆ ಮೀರಿರುತ್ತದೆ. ಆದರೆ ಈ ಬಾರಿ ಯಾವುದೂ ಇಲ್ಲ. ಹುಳಿ ದೋಸೆ, ಅವಲಕ್ಕಿ ಬೆಲ್ಲ-ಕಜ್ಜಾಯ, ಬಾಳೆಹಣ್ಣು ಇತರ ತಿಂಡಿಗಳ ಸಹಿತ ಪಟಾಕಿಯನ್ನೂ ಮಿಸ್ ಮಾಡಿಕೊಂಡಿದ್ದೇವೆ.
ನೀವು ಮಿಸ್ ಮಾಡಿಕೊಂಡಿಲ್ಲ ತಾನೇ?