Publish Date: Tue, 29 Apr 2008 (18:24 IST)
Updated Date: Tue, 29 Apr 2008 (18:24 IST)
ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ವಂಚಿತರನ್ನು ಸೆಳೆದುಕೊಳ್ಳುತ್ತಿರುವ ಜೆಡಿಎಸ್ ಇದೀಗ ತನ್ನ ಎರಡನೇ ಪಟ್ಟಿಯಲ್ಲಿ ಇಬ್ಬರು ಮಾಜಿ ಕಾಂಗ್ರೆಸ್ ಶಾಸಕರನ್ನು ಪಕ್ಷಕ್ಕೆ ಕರೆಸಿಕೊಂಡು ಟಿಕೆಟ್ ನೀಡಿದೆ.
ಇಂದು (ಮಂಗಳವಾರ) ತನ್ನ ಎರಡನೇ ಅಭ್ಯರ್ಥಿಯ ಪಟ್ಟಿ ಪ್ರಕಟಗೊಳಿಸಿರುವ ಜೆಡಿಎಸ್, ಕಾಂಗ್ರೆಸ್ನಿಂದ ಬಂಡಾಯವೆದಿದ್ದ ಇಬ್ಬರು ಶಾಸಕರಿಗೆ ಲಿಬಿ ಫಾರಂಳಿ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಕಾಂಕ್ಷಿಯಾಗಿದ್ದ ಮಾಜಿ ಶಾಸಕ ಗಂಗಾಧರ ಗೌಡ ಅವರಿಗೆ ಟಿಕೆಟ್ ನೀಡಿದ್ದರೆ, ಬಂಟ್ವಾಳದಲ್ಲಿ ಇನ್ನೊರ್ವ ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ ಅವರನ್ನು ಬಂಟ್ವಾಳ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ.
ಈ ಮೊದಲು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದ ರಾಜಶ್ರೀ ಹೆಗ್ಡೆಯವರನ್ನು ಕಣಕ್ಕಿಳಿಸಲು ಮುಂದಾಗಿದ್ದ ಜೆಡಿಎಸ್, ಕೊನೆಯ ಕ್ಷಣದಲ್ಲಿ ಗಂಗಾಧರ ಗೌಡ ಅವರಿಗೆ ಟಿಕೆಟ್ ನೀಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಅಲ್ಲದೆ, ಜೆಡಿಎಸ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಕೂಡ್ಲಿಗಿಯಿಂದ ರಾಜು, ಲಿಂಗಸುಗೂರು ಕ್ಷೇತ್ರದಿಂದ ಎಂ.ಪಿ. ನಾಯಕ ಸೇರಿದಂತೆ ಎರಡನೇ ಹಂತದ ಚುನಾವಣೆಯಲ್ಲಿ ಬರುವ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇನ್ನುಳಿದ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.