ಕಾಂಗ್ರೆಸ್ನಿಂದ ಮಲತಾಯಿ ಧೋರಣೆ: ಮುಲಾಯಂ
ನವದೆಹಲಿ , ಶನಿವಾರ, 7 ಜನವರಿ 2012 (12:27 IST)
ಸಮಾಜವಾದಿ ಪಕ್ಷದ ಬಗ್ಗೆ ಕಾಂಗ್ರೆಸ್ ಮಲತಾಯಿ ಧೋರಣೆ ತೋರುತ್ತಿದೆ. ಆದಾಗ್ಯೂ ಯುಪಿಎ ಸರಕಾರಕ್ಕೆ ನೀಡಿದ ಬೆಂಬಲವನ್ನು ಹಿಂಪಡೆಯುವುದಿಲ್ಲ ಎಂದು ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.ಕಾಂಗ್ರೆಸ್ ಪಕ್ಷ ಮಿತ್ರಕೂಟದಲ್ಲಿರುವ ಸಮಾಜವಾದಿ ಪಕ್ಷವನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಆದರೆ, ನಮ್ಮ ರಾಜಕೀಯ ಸಿದ್ಧಾಂತಗಳ ಮೇಲೆ ಅವಲಂಬಿಸಿದ್ದರಿಂದ, ಯುಪಿಎ ಸರಕಾರಕ್ಕೆ ನೀಡಿದ ಬೆಂಬಲ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.ಉತ್ತರಪ್ರದೇಶದ ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಒಂದಾಗಿ ಸರಕಾರ ರಚಿಸುವ ಸಾಧ್ಯತೆಗಳ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಾದವ್, ಕೋಮುವಾದಿ ಪಕ್ಷಗಳನ್ನು ಅಧಿಕಾರದಿಂದ ದೂರವಿಡಲು ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಾಗುವುದು ಎಂದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಬಹುಮತಗಳಿಸಿ ಅಧಿಕಾರದ ಗದ್ದುಗೆ ಏರುವ ವಿಶ್ವಾಸವಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.