Shorts

ಬೆಂಗಳೂರು: ಹಾಲಿ ಚಾಂಪಿಯನ್‌ ಕರ್ನಾಟಕ ತಂಡವು ವಿಜಯ್‌ ಹಜಾರೆ ಟ್ರೋಫಿಯನ್ನು ಉಳಿಸಿಕೊಳ್ಳುವತ್ತ ಹೆಜ್ಜೆಯಿಟ್ಟಿದೆ. ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಮೈದಾನದಲ್ಲಿ ನಡೆದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ಗೆಲುವು ಸಾಧಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ.ಕ್ವಾರ್ಟರ್‌ ಫೈನಲ್‌ ಪಂದ್ಯದ ವೇಳೆ ಮಳೆ ಬಂದಿದ್ದರಿಂದ ವಿಜೆಡಿ ನಿಯಮದ ಅನ್ವಯ ಕರ್ನಾಟಕ ತಂಡವು ಮುಂಬೈ ವಿರುದ್ಧ 55 ರನ್‌ಗಳ ಗೆಲುವು ದಾಖಲಿಸಿದೆ. ಟಾಸ್ ಗೆದ್ದ ಕರ್ನಾಟಕ ತಂಡವು ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿತ್ತು.ಕರ್ನಾಟಕದ ಬೌಲರ್‌ಗಳ ಬಿಗಿ ದಾಳಿಗೆ ಮುಂಬೈ ತಂಡ ಆರಂಭದಲ್ಲಿ ಕುಸಿತ ಕಂಡಿತು. 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಶಮ್ಸ್ ಮುಲಾನಿ (86 ರನ್‌; 91 ಎಸೆತ) ಸಮಯೋಚಿತ ಆಟವಾಡಿದರು. ಮುಂಬೈ ತಂಡವು 50 ಓವರ್‌ಗಳ ಅಂತ್ಯಕ್ಕೆ 8 ವಿಕೆಟ್‌ ನಷ್ಟಕ್ಕೆ 254 ರನ್‌ ಗಳಿಸಿತು. ಕರ್ನಾಟಕದ ಪರ ವಿದ್ಯಾದರ ಪಾಟೀಲ್‌ 3 ವಿಕೆಟ್‌ ಹಾಗೂ ವಿದ್ವತ್‌ ಕಾವೇರಿಯಪ್ಪ, ಅಭಿಲಾಶ್‌ ಶೆಟ್ಟಿ ತಲಾ 2 ವಿಕೆಟ್‌ ಪಡೆದು ಮಿಂಚಿದರು.

ನವಿ ಮುಂಬೈ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಸೋಮವಾರ ಮಹಿಳಾ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ತನ್ನ ಎರಡನೇ ಪಂದ್ಯದಲ್ಲಿ ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ಕೆ ಮಾಡಿದೆ. ಟೂರ್ನಿಯ ಐದನೇ ಪಂದ್ಯ ಇದಾಗಿದೆ.ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ಸ್ಮೃತಿ ಮಂದಾನ ನಾಯಕತ್ವದ ಆರ್‌ಸಿಬಿಯು ಯುಪಿ ವಾರಿಯರ್ಸ್ ಎದುರು ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಆಘಾತ ನೀಡಿರುವ ತಂಡವು, ಗೆಲುವಿನ ಓಟ ಮುಂದುವರಿಸುವ ಹುಮ್ಮಸ್ಸಿನಲ್ಲಿದೆ. 2023ರಲ್ಲಿ ಚಾಂಪಿಯನ್ ಆಗಿದ್ದ ಆರ್‌ಸಿಬಿ ತಂಡವು ಈ ಸಲ ಶುಭಾರಂಭ ಮಾಡಿದೆ. ಹರ್ಮನ್‌ಪ್ರೀತ್‌ ಕೌರ್‌ ಅವರ ನಾಯಕತ್ವದ ಮುಂಬೈ ಇಂಡಿಯನ್ಸ್‌ ವಿರುದ್ಧ ಮೊದಲ ಪಂದ್ಯದಲ್ಲಿ ಸ್ಕೃತಿ ಮಂದಾನ ಬಳಗ ರೋಚಕ ಜಯ ಸಾಧಿಸಿತ್ತು.

ನವದೆಹಲಿ: ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಶೀತಗಾಳಿ ಏರಿಕೆಯಾಗಿದೆ. ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತೀವ್ರ ಶೀತಗಾಳಿಯಿಂದ ತತ್ತರಿಸಿದೆ. ದೆಹಲಿಯಲ್ಲಿ ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ದೆಹಲಿಯಲ್ಲಿ ಕನಿಷ್ಠ ತಾಪಮಾನ 2.9 ಡಿಗ್ರಿಗಿಳಿದಿದೆ. ಮುಂದಿನ ಕೆಲ ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್‌ವರೆಗೆ ಕಡಿಮೆ ಆಗಲಿದ್ದು, ಶೀತಗಾಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರದಿಂದ ಬರುವ ಶೀತಗಾಳಿ ಗುಜರಾತ್‌, ಪಂಜಾಬ್ ಮತ್ತು ಪಶ್ಚಿಮದಲ್ಲಿ ರಾಜಸ್ಥಾನದ ಮೇಲೆ ಪರಿಣಾಮ ಬೀರಲಿದೆ. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಬೆಂಗಳೂರು: ದಕ್ಷಿಣ ಸುಡಾನ್‌ನಲ್ಲಿ ವಿಶ್ವಸಂಸ್ಥೆಯ ಮಿಷನ್‌ನಲ್ಲಿ (UNMISS) ಸೇವೆ ಸಲ್ಲಿಸುತ್ತಿರುವ ಬೆಂಗಳೂರಿನ 31 ವರ್ಷದ ಸೇನಾ ಅಧಿಕಾರಿ ಮೇಜರ್ ಸ್ವಾತಿ ಶಾಂತ ಕುಮಾರ್ ಅವರಿಗೆ 'ಸಮಾನ ಪಾಲುದಾರರು, ಶಾಶ್ವತ ಶಾಂತಿ' ಎಂಬ ಶೀರ್ಷಿಕೆಯ ಯೋಜನೆಗಾಗಿ 2025 ರ ಪ್ರತಿಷ್ಠಿತ ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಪ್ರಶಸ್ತಿಯನ್ನು ನೀಡಲಾಗಿದೆ.ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಭಾನುವಾರ ಘೋಷಿಸಿದ ಈ ಪ್ರಶಸ್ತಿಯು, ದಕ್ಷಿಣ ಸುಡಾನ್‌ನ ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಸುಮಾರು 5,000 ಮಹಿಳೆಯರಿಗೆ ಸುರಕ್ಷಿತ ವಾತಾವರಣವನ್ನು ಸೃಷ್ಟಿಸಿದ ಮೇಜರ್ ಸ್ವಾತಿ ಅವರ ಕಾರ್ಯತಂತ್ರದ ಕಾರ್ಯಾಚರಣೆಗಳನ್ನು ಗುರುತಿಸುತ್ತದೆ ಮತ್ತು ಅವರು ಮುಕ್ತವಾಗಿ ಚಲಿಸಲು ಮತ್ತು ಸ್ಥಳೀಯ ಶಾಂತಿ ಸಂವಾದಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ.

ರಾಮನಗರ: ಇನ್ನೇನು ವಾರದೊಳಗೆ ಬಿಗ್‌ಬಾಸ್ ಸೀಸನ್ 12 ಮುಕ್ತಾಯವಾಗಲಿದ್ದು, ಇದೀಗ ವಾರದ ಹಿಂದೆ ಕಿಚ್ಚ ಸುದೀಪ್ ಅವರು ವೀಕೆಂಡ್ ಎಪಿಸೋಡ್‌ನಲ್ಲಿ ಆಡಿದ ಮಾತು ದೂರು ನೀಡುವ ಮಟ್ಟಿಗೆ ಹೋಗಿದೆ. ಹೌದು ರಣಹದ್ದು ವಿಚಾರವಾಗಿ ತಪ್ಪಾದ ಹೇಳಿಕೆ ನೀಡಿರುವ ಆರೋಪದಡಿ ಬಿಗ್‌ಬಾಸ್ ಹಾಗೂ ಕಿಚ್ಚ ಸುದೀಪ್ ವಿರುದ್ಧ ಪರಿಸರ ಪ್ರಿಯರು ದೂರನ್ನು ನೀಡಿದ್ದಾರೆ. ರಾಮನಗರದ ಅರಣ್ಯಾಧಿಕಾರಿಗಳಿಗೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ದೂರು ನೀಡಲಾಗಿದ್ದು, ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ರಣಹದ್ದು ಬಗ್ಗೆ ಕಿಚ್ಚ ಸುದೀಪ್ ತಪ್ಪಾದ ಮಾಹಿತಿ ಹರಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ವೀಕೆಂಡ್ ಎಪಿಸೋಡ್‌ನಲ್ಲಿ ಸ್ಪರ್ಧಿಯೊಬ್ಬರ ಕುತ್ತಿಗೆಗೆ ರಣಹದ್ದು ಫೋಟೋವೊಂದನ್ನ ಹಾಕಿಸಿ ʻಹೊಂಚುಹಾಕಿ ಸಂಚು ಮಾಡಿ

ಬೆಂಗಳೂರು: ಕೊನೆಗೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದೆ. ಇಂತಿಷ್ಟು ದಿನದೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಗಡುವು ನೀಡಿದೆ. ಜೂನ್ 30 ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅಡ್ವೊಕೇಟ್‌ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.ಅಂತಿಮವಾಗಿ ಚುನಾವಣಾ ಪ್ರಕ್ರಿಯೆ ಮುಗಿಸಲು ಎಷ್ಟು ಸಮಯ ಬೇಕು ಎಂದು ಕೋರ್ಟ್‌ ಪ್ರಶ್ನಿಸಿತು. ಇದಕ್ಕೆ ಜೂನ್‌ವರೆಗೂ ಸಮಯ ಬೇಕಾಗಬಹುದು ಎಂದು ಆಯೋಗ ಉತ್ತರಿಸಿತು. ಅಂತಿಮವಾಗಿ ಸುಪ್ರೀಂಕೋರ್ಟ್ ಜೂನ್ 30 ರೊಳಗೆ ಜಿಬಿಎ ಚುನಾವಣೆ ನಡೆಸಲು ನಿರ್ದೇಶನ ನೀಡಿತು.

ಕೋಲ್ಕತ್ತಾ: ನಟ-ಗಾಯಕ ಮತ್ತು 2007 ರಲ್ಲಿ ಇಂಡಿಯನ್ ಐಡಲ್ ಸೀಸನ್ 3 ವಿಜೇತ ಪ್ರಶಾಂತ್ ತಮಂಗ್ ಭಾನುವಾರ ತಮ್ಮ 43 ನೇ ವಯಸ್ಸಿನಲ್ಲಿ ನಿಧನರಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, "'ಇಂಡಿಯನ್ ಐಡಲ್' ಖ್ಯಾತಿಯ ಜನಪ್ರಿಯ ಗಾಯಕ ಮತ್ತು ರಾಷ್ಟ್ರೀಯ ಖ್ಯಾತಿಯ ಕಲಾವಿದ ಪ್ರಶಾಂತ್ ತಮಂಗ್ ಅವರ ಇಂದು ಹಠಾತ್ ಮತ್ತು ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ನಮ್ಮ ಡಾರ್ಜಿಲಿಂಗ್ ಬೆಟ್ಟಗಳಲ್ಲಿ ಅವರ ಬೇರುಗಳು ಮತ್ತು ಒಂದು ಕಾಲದಲ್ಲಿ ಕೋಲ್ಕತ್ತಾ ಪೊಲೀಸರೊಂದಿಗಿನ ಸಂಬಂಧವು ಅವರನ್ನು ಬಂಗಾಳದಲ್ಲಿ ನಮಗೆ ವಿಶೇಷವಾಗಿ ಪ್ರಿಯರನ್ನಾಗಿ ಮಾಡಿತು. ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅನುಯಾಯಿಗಳಿಗೆ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ರಿಷಭ್ ಪಂತ್ ಬದಲಿಗೆ ಧ್ರುವ್ ಜುರೆಲ್ ಅವರನ್ನು ಆಯ್ಕೆ ಮಾಡಲಾಗಿದೆ. ವಡೋದರಾದಲ್ಲಿ ನಡೆದ ನೆಟ್ ಸೆಷನ್‌ನಲ್ಲಿ ಎಸೆತವೊಂದು ಪಕ್ಕೆಲುಬಿನ ಮೇಲೆ ಬಡಿದು ಪಕ್ಕೆಲುಬಿನ ನೋವು ಕಾಣಿಸಿಕೊಂಡ ಕಾರಣ ಪಂತ್ ಅವರನ್ನು ಏಕದಿನ ಸರಣಿಯಿಂದ ಹೊರಗಿಡಲಾಯಿತು. ಭಾನುವಾರ ನಡೆದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಪಂತ್ ತೀವ್ರ ನೋವಿನಿಂದ ಬಳಲುತ್ತಿದ್ದರು ಮತ್ತು ಅವರು ಏಕದಿನ ಸರಣಿಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತರ ಪ್ರದೇಶ ಪರ ಜುರೆಲ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ ಮತ್ತು ಬಿಸಿಸಿಐ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ಅವರು ಈಗಾಗಲೇ ತಂಡದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ತಿಳಿಸಲಾಗಿದೆ.